ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಡುವಂತೆ ರಾಜ್ಯ ಸರ್ಕಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತಗಳನ್ನು ಕಳುಹಿಸಿತ್ತು, ಆದರೆ ರಾಜ್ಯಪಾಲರು ಎರಡೂ ಕಡತಗಳನ್ನು ವಾಪಸ್ ಕಳಿಸಿದ್ದಾರೆ.
ದಾಖಲೆಗಳು ಕನ್ನಡದಲ್ಲಿದೆ ಆಂಗ್ಲ ಭಾಷೆಯಲ್ಲಿ ಅನುವಾದ ಮಾಡಿ ಕಳಿಸಿ ಎಂದು ಕಾರಣ ಕೊಟ್ಟು ವಾಪಸ್ ಕಳಿಸುವ ಮೂಲಕ ಕನ್ನಡ ವಿರೋಧಿ ಧೋರಣೆ ತೋರಿಸಿದ್ದಾರೆ ಎಂದು ರಾಜ್ಯ ಆಮ್ ಆದ್ಮಿ ಪಾರ್ಟಿ ಉಪಾಧ್ಯಕ್ಷ ಡಾ. ರಮೇಶ್ ಬೆಳ್ಳಂಕೊಂಡ ಹೇಳಿದ್ದಾರೆ. ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರಮೇಶ್ ಬೆಳ್ಳಂಕೊಂಡ, 2023ರ ನವೆಂಬರ್ ತಿಂಗಳಿನಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ದಾಖಲೆಗಳನ್ನು ನೀಡಿ, ಅಭಿಯೋಜನೆಗೆ ಅನುಮತಿ ನೀಡಲಾಗಿತ್ತು. ಆದರೆ 9 ತಿಂಗಳು ಸುಮ್ಮನೆ ಇದ್ದ ರಾಜ್ಯಪಾಲರು ಆಗಸ್ಟ್ 28 ರಂದು ಇಂಗ್ಲಿಷ್ಗೆ ಅನುವಾದ ಮಾಡಿ ಕಳಿಸಿ ಎಂದು ವಾಪಸ್ ಕಳಿಸಿದ್ದಾರೆ. ಕನ್ನಡ ಅರ್ಥವಾಗದೇ ಇದ್ದರೆ ಇಂಗ್ಲಿಷ್ಗೆ ಅನುವಾದ ಮಾಡಿ ಕೊಡಿ ಎಂದು ಕೇಳಲು 9 ತಿಂಗಳು ಕಾಯಬೇಕಿತ್ತಾ ಎಂದು ಪ್ರಶ್ನೆ ಮಾಡಿದರು.
ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಕೂಡ ಅಭಿಯೋಜನೆಗೆ ಅನುಮತಿ ಕೊಡಲು 2024ರ ಮೇ ತಿಂಗಳಿನಲ್ಲಿ ರಾಜ್ಯ ಸರ್ಕಾರ ದಾಖಲೆಗಳನ್ನು ನೀಡಿದ್ದರೂ, ಇಷ್ಟು ದಿನ ಸುಮ್ಮನಿದ್ದು, ಈಗ ವಾಪಸ್ ಕಳಿಸಿದ್ದಾರೆ. ಗೆಹ್ಲೋಟ್ ಕಳೆದ ಮೂರು ವರ್ಷದಿಂದ ಕರ್ನಾಟಕದ ರಾಜ್ಯಪಾಲರಾಗಿದ್ದಾರೆ, ಅವರಿಗೆ ಕನ್ನಡ ಬರದೇ ಇದ್ದರೆ, ಒಬ್ಬರು ತರ್ಜುಮೆ ಮಾಡಲು ಕೂಡ ಅವರ ಕಚೇರಿಯಲ್ಲಿ ಸಿಬ್ಬಂದಿಯನ್ನು ಇಟ್ಟುಕೊಂಡಿಲ್ಲವಾ, ಕರ್ನಾಟಕದಲ್ಲಿದ್ದರೂ ಕನ್ನಡದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ಎಂದರು. ಆಮ್ ಆದ್ಮಿ ಪಾರ್ಟಿ ಹಿರಿಯ ನಾಯಕ ಗುರುಮೂರ್ತಿಯವರು ಮಾತನಾಡಿ, ರಾಜ್ಯಪಾಲರ ವರ್ತನೆಯನ್ನು ನೋಡಿದರೆ ಅವರು ಈಗ ಒಂದು ಪಕ್ಷದ ಪರ ಇದ್ದಾರೆ ಎನ್ನುವ ಅನುಮಾನ ಮೂಡುತ್ತಿದೆ. ಗಂಭೀರ ಭ್ರಷ್ಟಾಚಾರ ಆರೋಪಗಳಿದ್ದರೂ, ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿದಾಗ ಹಲವು ತಿಂಗಳು ಕಾಯಿಸುವುದು ಸರಿಯಾದ ನಡೆಯಾ ಎಂದರು, ರಾಜ್ಯಪಾಲರು ಈ ಪ್ರಶ್ನೆಗಳಿಗೆ ಉತ್ತರ ಕೊಡಬೇಕು, ಕನ್ನಡಿಗರಿಗೆ ಅವರು ಇದಕ್ಕೆ ಉತ್ತರ ಕೊಡಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

