ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದ ಬರುವ ಹಣದಿಂದ ಬಹಳಷ್ಟು ಮಹಿಳೆಯರು ಅನುಕೂಲ ಪಡೆದುಕೊಂಡಿದ್ದಾರೆ ಎಂದರೆ ತಪ್ಪಾಗಲಾರದು. ಈ ಹಿಂದೆ ಮಹಿಳೆಯರು ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮೊಬೈಲ್, ಕಣ್ಣಿನ ಶಸ್ತ್ರಚಿಕಿತ್ಸೆ, ಫ್ರಿಡ್ಜ್, ಹೋಳಿಗೆ ಊಟ, ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಕೊಡುವ ಮೂಲಕ ಸುದ್ದಿಯಾಗಿದ್ದರು.
ಇದೀಗ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಹಿರೇಬಿಡನಾಳ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮಹಿಳೆಯರು ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಗ್ರಾಮದ ಮಹಿಳೆಯರು ಶ್ರೀ ಶರಣಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಒಂದು ತಿಂಗಳ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ನೀಡುವ ಮೂಲಕ ಮಾದರಿಯಾಗಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಮಹಿಳೆಯರ ನಡೆಯನ್ನು ಪ್ರಶಂಶಿಸಿದ್ದಾರೆ.
ಗ್ರಾಮದಲ್ಲಿ ಸುಮಾರು 100ಕ್ಕೂ ಅಧಿಕ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಈ ಪೈಕಿ 50ಕ್ಕೂ ಹೆಚ್ಚು ಮಹಿಳೆಯರು ಈಗಾಗಲೇ ದೇವಸ್ಥಾನ ಕಮಿಟಿಯವರಿಗೆ ತಲಾ 2 ಸಾವಿರ ರೂಪಾಯಿ ದೇಣಿಗೆ ರೂಪದಲ್ಲಿ ನೀಡಿದ್ದಾರೆ. ತಮ್ಮ ಖಾತೆಗೆ ಹಣ ಜಮೆಯಾದ ಬಳಿಕ ಒಬ್ಬೊಬ್ಬರಾಗಿ ದೇವಸ್ಥಾನಕ್ಕೆ ತೆರಳಿ ಕಮಿಟಿಯವರಿಗೆ ದೇಣಿಗೆ ನೀಡುತ್ತಿದ್ದಾರೆ. ಮೂರು ತಿಂಗಳ ಪೈಕಿ ಒಂದು ತಿಂಗಳ ಹಣ 15 ದಿನದ ಹಿಂದೆ ಬಂದಿದೆ. ಅದೇ ಹಣ ಡ್ರಾ ಮಾಡಿಕೊಂಡು ದೇವಸ್ಥಾನ ನಿರ್ಮಾಣಕ್ಕೆ ನೀಡಿದ್ದೇವೆ. ಯಾರ ಒತ್ತಡವಿಲ್ಲದೆ ಹಣ ನೀಡುತ್ತಿದ್ದೇವೆ ಎಂದು ಮಹಿಳೆಯರು ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇಷ್ಟೊಂದು ಸಮರ್ಪಕವಾಗಿ ಬಳಕೆಯಾಗುತ್ತಿರುವುದು ಸಾರ್ಥಕವೆನಿಸುತ್ತಿದೆ ಎಂದು ಟ್ವೀಟ್ ಮಾಡಿ ಮಹಿಳೆಯರನ್ನು ಅಭಿನಂದಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

