ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಕಾಮಗಾರಿಯನ್ನು 2026ರ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ವಿಧಾನಸೌಧದಲ್ಲಿಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ನಡೆದ ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು.
ಉಪನಗರ ರೈಲು ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣ ಮೀಸಲಿಟ್ಟಿದ್ದು, ಕೇಂದ್ರದ ಪಾಲಿನ ಹಣ ಬಿಡುಗಡೆಗೆ ಕ್ರಮ ವಹಿಸುವುದಾಗಿ ತಿಳಿಸಿದರು. ಪ್ರಧಾನಿ ನರೇಂದ್ರಮೋದಿ ಅವರು 148 ಕಿ.ಮೀ ಉಪನಗರ ರೈಲು ಯೋಜನೆಗೆ ಅಡಿಪಾಯ ಹಾಕಿದ್ದರು. ನಾವು ಈಗ 70 ಕಿ.ಮೀ ಉಪನಗರ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದೇವೆ ಎಂದರು.
ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣವಾರದವರೆಗೆ 26 ಕಿ.ಮೀ ಹಾಗೂ ಈಲರಿಯಿಂದ ರಾಜಾನುಕುಂಟೆ ನಡುವೆ 48 ಕಿ.ಮೀ ಉದ್ದದ ಉಪನಗರ ರೈಲ್ವೆ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ರೈಲ್ವೆ , ಮೆಟ್ರೋ, ಬಿಡಿಎ, ಕಂದಾಯ ಹಾಗೂ ಬಿಬಿಎಂಪಿ ನಡುವೆ ಸಮನ್ವಯದಿಂದ ಉಪನಗರ ರೈಲ್ವೆ ಮಾರ್ಗ ನಿರ್ಮಾಣದ ಕೆಲಸ ಸಾಗಲಿದೆ ಎಂದು ಸಚಿವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

