ನವದೆಹಲಿ : ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.
ಹೊಸದಿಲ್ಲಿಯ ಉದ್ಯೋಗ ಭವನದಲ್ಲಿರುವ ಭಾರಿ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂ.ಬಿ.ಪಾಟೀಲ್, ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕುಮಾರಸ್ವಾಮಿ, ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.
ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಎಂ.ಬಿ.ಪಾಟೀಲ್ ಅವರಿಂದ ಕುಮಾರಸ್ವಾಮಿ ಮಾಹಿತಿ ಪಡೆದುಕೊಂಡರು ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಎಂ.ಬಿ.ಪಾಟೀಲ್, ಕೇಂದ್ರ ಸರಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.
ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂ.ಬಿ.ಪಾಟೀಲ್ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು ಎಂದು ಕುಮಾರಸ್ವಾಮಿ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

