ಬೀದರ್: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿಯಲ್ಲಿ ಬೀದರ್ ಜಿಲ್ಲೆಯ ಸಾಧನೆ ಬಹಳ ಕಳಪೆಯಾಗಿದೆ, ಯುವನಿಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಡುತ್ತಿರುವ ಕೆಲಸ ತೃಪ್ತಿ ತಂದಿಲ್ಲ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಬೇಸರ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಬೀದರ್ ಜಿಲ್ಲೆಯಲ್ಲಿ ಯುವನಿಧಿಯಲ್ಲಿ ಬಹಳ ಕಳಪೆ ಕೆಲಸವಾಗಿದೆ, ಯುವನಿಧಿ ಮೂಲಕ ನಿರುದ್ಯೋಗಿ ಪದವೀಧರರಿಗೆ ಹಣ ಕೊಡಲಾಗುತ್ತಿದೆ, ಇದಕ್ಕಿಂತ ಮುಖ್ಯವಾಗಿ ಈ ಯೋಜನೆ ಮೂಲಕ ನಿರುದ್ಯೋಗಿಗಳನ್ನು ಗುರುತಿಸಿ ಅವರಿಗೆ ಕೌಶಲ್ಯ ತರಬೇತಿ ಕೊಡುವುದಾಗಿದೆ. ಆದರೆ, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೆಲಸವೇ ಆಗಿಲ್ಲ. ನಿಮ್ಮ ಕಾರ್ಯವೈಖರಿ ಬದಲಿಸಿಕೊಳ್ಳಬೇಕು ಎಂದು ಉದ್ಯೋಗ ವಿನಿಮಯ ಅಧಿಕಾರಿ ಬಸವರಾಜ ಅವರನ್ನು ತರಾಟೆಗೆ ತೆಗೆದುಕೊಂಡರು.
ಯುವನಿಧಿ ಅಡಿ ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ ಕೊಡುವುದರ ಬಗ್ಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಬಸವರಾಜ ಹೇಳಿದರು. ಇದರಿಂದ ಮತ್ತಷ್ಟು ಸಿಟ್ಟಿಗಾದ ಮೆಹರೋಜ್ ಖಾನ್, ಎಲ್ಲ ಮಾಹಿತಿಯೂ ಯುವನಿಧಿ ಒಳಗೊಂಡಿದೆ. ನೀವು ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಬೇಕು. ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ ಕೊಟ್ಟು ಆ ಮೂಲಕ ಅವರಿಗೆ ಉದ್ಯೋಗ ಒದಗಿಸಿಕೊಡುವ ಕೆಲಸ ಮಾಡಬೇಕು. ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ಕೊಟ್ಟರು.
ಪದವಿ, ಡಿಪ್ಲೊಮಾ ಕಾಲೇಜುಗಳಿಗೆ ಭೇಟಿ ಕೊಡಬೇಕು. ಅಲ್ಲಿ ಪಾಸಾದವರ ಮಾಹಿತಿ ಸಂಗ್ರಹಿಸಿ, ಯುವನಿಧಿಯ ಸೌಲಭ್ಯಗಳ ಕುರಿತು ಅವರ ಮೊಬೈಲ್ಗೆ ಸಂದೇಶ ಕಳಿಸಬೇಕು. ಕಾಲೇಜುಗಳಲ್ಲಿ ಪ್ರಚಾರ ಮಾಡಬೇಕು. ಜಿಲ್ಲೆಯಲ್ಲಿ ಇತರೆ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶೇ 95ರಷ್ಟಾಗಿದೆ. ಆದರೆ, ಯುವನಿಧಿಯಲ್ಲಿ ಬಹಳ ಹಿಂದೆ ಬಿದ್ದಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

