ಬೆಂಗಳೂರು: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸುವ ಕುರಿತು ಉದ್ದಿಮೆದಾರರ ಜತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜತೆ ಮಾತನಾಡಿದ ಕೇಂದ್ರ ಸಚಿವರು ಭರವಸೆ ನೀಡಿದರು.
ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಶಿರಾ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಶಾಸಕರಿಗೆ ಭರವಸೆ ನೀಡಿದರು.
ಉದ್ಯಮಿಗಳ ಜತೆ ಸಮಾಲೋಚನೆ ನಡೆಸುತ್ತೇನೆ. ಹಾಗೆಯೇ ನಮ್ಮ ಇಲಾಖೆ ಹಂತದಲ್ಲಿಯೂ ಚರ್ಚೆ ಮಾಡುತ್ತೇನೆ ಎಂದ ಅವರು ಗಡಿ ಭಾಗದಲ್ಲಿ ಕೈಗಾರಿಕೆಗಳು ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದು ಸಚಿವರು ಹೇಳಿದರು.
ಮಡಕಶಿರಾ ಶಾಸಕ ಎಂಎಸ್ ರಾಜು ಮಾತನಾಡಿ ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. 3000 ಎಕರೆ ಜಾಗ ಇದೆ, ಪೆನುಗೊಂಡ ಹೆದ್ದಾರಿ ಬಳಿಯೂ ಜಾಗ ಇದೆ. ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗ ಇದೆ. ಕೈಗಾರಿಕೆ ಕ್ಲಸ್ಟರ್ ಮಾಡಿದರೆ ಮಡಕಶಿರಾ ಸೇರಿ ಅಲ್ಲಿ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ. ಮಡಕಶಿರಾ ಜತೆಗೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮೂಲಕ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

