ಬೆಳಗಾವಿ: ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಆಧುನಿಕ ಸೌಲಭ್ಯ ಒಳಗೊಂಡ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ರಾಮತೀರ್ಥ ನಗರದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಆವರಣ ಗೋಡೆ ನಿರ್ಮಾಣ, ನೆಲ ಸಮತಟ್ಟುಗೊಳಿಸುವುದು ಸೇರಿದಂತೆ ಮೊದಲ ಹಂತದ ಕಾಮಗಾರಿಗಳು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿವೆ ಎಂದರು.
ಸದ್ಯ ಇರುವ ಜಿಲ್ಲಾ ಕ್ರೀಡಾಂಗಣದ ಲೀಸ್ ಅವಧಿ ಇನ್ನೆರಡು ವರ್ಷಗಳಲ್ಲಿ ಮುಕ್ತಾಯವಾಗಲಿದೆ. ಹಾಗಾಗಿ ಕ್ರೀಡಾ ಚಟುವಟಿಕೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳಿಗಾಗಿ ನಗರಕ್ಕೆ ಹೊಸ ಕ್ರೀಡಾಂಗಣದ ಅಗತ್ಯವಿತ್ತು. ಇದಕ್ಕೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ 17.36 ಎಕರೆ ಜಮೀನು ಮಂಜೂರುಗೊಳಿಸಿದ್ದು, ಮೊದಲ ಹಂತದ ಕಾಮಗಾರಿ ಆರಂಭಿಸಲಾಗುವುದು. ಟ್ರ್ಯಾಕ್ಗಳು, ಗ್ಯಾಲರಿಗಳು, ಇತರೆ ಕಾಮಗಾರಿಗಳನ್ನು ಎರಡನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ, ಹೊಸ ಜಿಲ್ಲಾ ಕ್ರೀಡಾಂಗಣಕ್ಕೆ ಚಿಂತನೆ ನಡೆಸಿದ್ದೆವು. ನಾವು ಅಧಿಕಾರ ಹಿಡಿದ ನಂತರ, ಈ ಪ್ರಕ್ರಿಯೆ ಚುರುಕುಗೊಳಿಸಿದೆವು. ಜಾಗ ಗುರುತಿಸಿದೆವು. ಮೊದಲ ಹಂತದ ಕಾಮಗಾರಿಗೆ ₹10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು. ಹೊಸ ಕ್ರೀಡಾಂಗಣಕ್ಕೆ ಗುರುತಿಸಿದ ಜಾಗದಲ್ಲಿ ದೇವಸ್ಥಾನ ಇದೆ. ಅದನ್ನು ಸ್ಥಳಾಂತರಿಸಲು ದೇವಸ್ಥಾನದ ಆಡಳಿತ ಮಂಡಳಿ ಸಮ್ಮತಿ ಸೂಚಿಸಿದೆ. ಕ್ರೀಡಾಂಗಣ ಪಕ್ಕದಲ್ಲೇ ದೇವಾಲಯದ ಪುನರ್ನಿರ್ಮಾಣ ಮಾಡಲಾಗುವುದು. ನಿವಾಸಿಗಳ ಬೇಡಿಕೆಯಂತೆ, ಅಲ್ಲಿ ಸಮುದಾಯ ಭವನ ಸಹ ನಿರ್ಮಿಸಲಾಗುವುದು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

