ಬೆಂಗಳೂರು : 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿರುವ ಅಜೀಂ ಪ್ರೇಮ್ಜಿ ಫೌಂಡೇಶನ್ ಫಾರ್ ಡೆವಲಪ್ಮೆಂಟ್ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸೇರಿದಂತೆ ಸರ್ಕಾರಿ, ಅನುದಾನಿತ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎಲ್ಲಾ ಆರು ದಿನಗಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ,/ಬಾಳೆಹಣ್ಣು/ ಶೇಂಗಾ ಚಿಕ್ಕಿಯನ್ನು ವಿತರಿಸುತ್ತಿದ್ದು ಅಧಿಕೃತವಾಗಿ ಚಾಲನೆ ನೀಡುವ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಹಂತದಲ್ಲಿ 25-09-2024 ರಂದು ನಡೆಸುವ ಬಗ್ಗೆ ರಾಜ್ಯ ಸರ್ಕಾರವು ಸೂಚನೆ ನೀಡಿದೆ.
ರಾಜ್ಯ ಸರ್ಕಾರವು ಹಿಂದಿನ ವರ್ಷಗಳಂತೆ ಈ ವರ್ಷವೂ ಸಹ ತನ್ನ ವಾರ್ಷಿಕ ಶೇಕಡಾ 100 ರ ಆರ್ಥಿಕ ಅನುದಾನದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಪೂರ್ವಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅವರಲ್ಲಿರುವ ಅಪೌಷ್ಠಿಕತೆ ನಿವಾರಿಸಲು, ರಕ್ತ ಹೀನತೆ ತಡೆಗಟ್ಟಲು, ಬಹು ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು, ಅವರ ಆರೋಗ್ಯಕರ ದೈಹಿಕ ಮಾನಸಿಕ ಬೆಳವಣಿಗೆಯನ್ನು ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಮತ್ತು ಅವರ ಶಾಲಾ ತರಗತಿ ದಾಖಲಾತಿಯನ್ನು ಹೆಚ್ಚಳವಾಗಿಸಲು ರಾಜ್ಯದಲ್ಲಿಯೇ ವಿನೂತನವಾಗಿ ಶಾಲೆಗಳಲ್ಲಿ ಪೂರಕ ಪೌಷ್ಠಿಕ ಆಹಾರವಾಗಿ ಬಿಸಿಹಾಲು, ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನು ವಿತರಿಸುವ ಕಾರ್ಯಕ್ರಮವನ್ನು ಮದ್ಯಾಹ್ನ ಬಿಸಿಯೂಟದೊಂದಿಗೆ ಕಳೆದ ಸಾಲಿನಿಂದ ಪೂರ್ವ ಪ್ರಾಥಮಿಕ ಶಾಲೆಗಳ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಸೇರಿದಂತೆ ಎಲ್ಲಾ 1-10 ನೇ ತರಗತಿಯ 55 ಲಕ್ಷ ವಿದ್ಯಾರ್ಥಿಗಳಿಗೆ ಉಲ್ಲೇಖ 1 ರಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮುನ್ನಡೆಸಿಕೊಂಡು ಬರುತ್ತಿದೆ.
ಈ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲು ಯಾದಗಿರಿ ಜಿಲ್ಲೆಯ ಆಯ್ಕೆ ಸರ್ಕಾರಿ ಶಾಲೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಾನ್ಯ ಶಿಕ್ಷಣ ಸಚಿವರು ಸರ್ಕಾರದ ಪ್ರತಿನಿಧಿಯಾಗಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಮಾನ್ಯ ಉಸ್ತುವಾರಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ಸದರಿ ಕಾರ್ಯಕ್ರಮಕ್ಕೆ ಎಪಿಎಫ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸುವ ಸಂಬಂಧ ಅಗತ್ಯವಾದ ಎಲ್ಲಾ ಸಕಲ ಪೂರ್ವಸಿದ್ಧತೆಗಳನ್ನು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ, ಚರ್ಚಿಸಿ, ತಯಾರಿ ಮಾಡಿಕೊಳ್ಳುವಂತೆ ಯಾದಗಿರಿ ಜಿಲ್ಲೆಯ ಅನುಷ್ಠಾನಾಧಿಕಾರಿಗಳಿಗೆ ಮತ್ತು ಇಲಾಖೆಯ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





