ಬೆಂಗಳೂರು: ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್ಐಆರ್ (ನಾಲೆಡ್ಜ್ ಹೆಲ್ತ್ ಇನ್ನೋವೇಶನ್ ರೀಸರ್ಚ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.26ರಂದು ಚಾಲನೆ ನೀಡಲಿದ್ದಾರೆ.
ಇದರ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ದೇಶ ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಬಗ್ಗೆ ಭಾನುವಾರ ಮಾಹಿತಿ ನೀಡಿರುವ ಅವರು, ಒಟ್ಟು 2,000 ಎಕರೆ ವಿಸ್ತೀರ್ಣದಲ್ಲಿ ಈ ಯೋಜಿತ ನಗರ ಮೈದಾಳಲಿದೆ. ಈ ಪೈಕಿ ಮೊದಲ ಹಂತದಲ್ಲಿ 500 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಸಾಕಾರಗೊಳ್ಳಲಿದೆ. 40 ಸಾವಿರ ಕೋಟಿ ರೂ. ಹೂಡಿಕೆಯ ಈ ಯೋಜನೆಯಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದಾರೆ. ಸಿಂಗಪುರದ ಬಯೊಪೋಲಿಸ್, ರೀಸರ್ಚ್ ಟ್ರ್ಯಾಂಗಲ್ ಪಾರ್ಕ್, ಸೈನ್ಸ್ ಪಾರ್ಕ್, ಕೆಬಿಐಸಿ, ಅಮೆರಿಕದ ಬೋಸ್ಟನ್ ಇನ್ನೋವೇಶನ್ ಕ್ಲಸ್ಟರ್ ಇದಕ್ಕೆ ಮಾದರಿಯಾಗಿದೆ. ಜತೆಗೆ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಪಡಿಸಿರುವ ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿಯ ಮಾನದಂಡಗಳನ್ನೂ ಇಟ್ಟುಕೊಳ್ಳಲಾಗಿದೆ. ದೊಡ್ಡಬಳ್ಳಾಪುರ ಡಾಬಸಪೇಟೆ ನಡುವೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ಕಿ.ಮೀ. ದೂರದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.
ಶಿಕ್ಷಣ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಯೇ ಈ ಪರಿಕಲ್ಪನೆಯ ಆಧಾರಸ್ತಂಭಗಳಾಗಿವೆ. ಜೀವವಿಜ್ಞಾನಗಳು, ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್ ಮ್ಯಾನುಫ್ಯಾಕ್ಚರಿಂಗ್ ಮತ್ತು ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಿಗೆ ಇಲ್ಲಿ ಆದ್ಯತೆ ನೀಡಲಾಗುವುದು. ಈ ವಲಯಗಳಿಗೆ ಸಂಬಂಧಿಸಿದ ಜಾಗತಿಕ ಮಟ್ಟದ ಉತ್ಕೃಷ್ಟ ವಿ.ವಿ.ಗಳು, ಸಂಶೋಧನಾಲಯಗಳು, ಆಸ್ಪತ್ರೆಗಳು ಮತ್ತು ಕಂಪನಿಗಳು ಕೆಎಚ್ಐಆರ್ ಸಿಟಿಯಲ್ಲಿ ನೆಲೆಯೂರಿ, ತಮ್ಮ ಚಟುವಟಿಕೆ ಆರಂಭಿಸಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೆಎಚ್ಐಆರ್ ಸಿಟಿಯಲ್ಲಿ ಜಗತ್ತಿನ ಅಗ್ರಮಾನ್ಯ 500 ಶಿಕ್ಷಣ ಸಂಸ್ಥೆಗಳ ಸ್ಥಳೀಯ ಕ್ಯಾಂಪಸ್ ಬರಲು ಇನ್ನು ಹಾದಿ ಸುಗಮವಾಗಲಿದೆ. ಅಲ್ಲದೆ, ವೈದ್ಯಕೀಯ ಪ್ರವಾಸೋದ್ಯಮ ಇತ್ಯಾದಿಗಳಿಗೂ ಹೇರಳ ಅವಕಾಶ ಸೃಷ್ಟಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

