ಬೆಂಗಳೂರು: ವಿದ್ಯುತ್ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ 2030ಕ್ಕೆ ರಾಜ್ಯದಿಂದ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಇಟ್ಟುಕೊಂಡಿದ್ದು, ಇದಕ್ಕಾಗಿ ವಿವಿಧ ಮೂಲಗಳಿಂದ ಉತ್ಪಾದನೆಯ ಕಾರ್ಯಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸ್ಥಾಪಿಸಿರುವ ರಾಜ್ಯದ ಮೊಟ್ಟ ಮೊದಲ 370 ಮೆಗಾವ್ಯಾಟ್ ಸಾಮರ್ಥ್ಯದ ಅನಿಲ ಆಧಾರಿತ ಯಲಹಂತ ಸಂಯುಕ್ತ ವಿದ್ಯುತ್ ಸ್ಥಾವರವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಜೊತೆಗೂಡಿ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸದ್ಯ 34,639 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಬೇಸಿಗೆಯಲ್ಲಿ 16-17 ಸಾವಿರ ಮೆಗಾವ್ಯಾಟ್ ಮತ್ತು ಮಳೆಗಾಲದಲ್ಲಿ 15-16 ಸಾವಿರ ಮೆಗಾವ್ಯಾಟ್ ಯೂನಿಟ್ ವಿದ್ಯುತ್ಗೆ ಬೇಡಿಕೆ ಇದೆ. ಕಳೆದ ವರ್ಷ ತೀವ್ರ ಬರಗಾಲವಿದ್ದರೂ ಸಮರ್ಪಕ ವಿದ್ಯುತ್ ಪೂರೈಕೆಯಲ್ಲಿ ಯಶಸ್ವಿಯಾಗಿದ್ದೇವೆ. ಭವಿಷ್ಯದ ಬೇಡಿಕೆಯನ್ನು ಗಮದಲ್ಲಿಟ್ಟುಕೊಂಡು ಬಜೆಟ್ನಲ್ಲಿ ಘೋಷಿಸಿದಂತೆ 2030ರ ವಿದ್ಯುತ್ ಉತ್ಪಾದನೆ ಸಾಮರ್ಥ್ಯವನ್ನು 60 ಸಾವಿರ ಮೆಗಾವ್ಯಾಟ್ಗೆ ಹೆಚ್ಚಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದರು.
ಛತ್ತೀಸ್ಗಢದ ಗೋದ್ನಾದಲ್ಲಿ 1600 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಸ್ಥಾವರ, ಶರಾವತಿಯಲ್ಲಿ 2,000 ಮೆಗಾವ್ಯಾಟ್, ವಾರಾಹಿಯಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಘಟಕ ಸ್ಥಾಪನೆ, ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಸೇರಿ ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆಗೂ ಆದ್ಯತೆ ನೀಡಲಾಗುವುದು. ಒಟ್ಟಾರೆ ಶೀಘ್ರವೆ 10,000 ಮೆಗಾವ್ಯಾಟ್ ವಿದ್ಯುತ್ ಘಟಕ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.
ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರದ ಎಲ್ಲಾ ಉದ್ಯೋಗಿಗಳಿಗೆ ₹5000 ಬೋನಸ್ ನೀಡಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

