ಬೆಂಗಳೂರು: ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ಎನ್ ಎಂ ಸಿ (ನ್ಯಾಷನಲ್ ಮೆಡಿಕಲ್ ಕಮಿಷನ್)ಗೆ ಮರು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಮನಗರ ಹಾಗೂ ಕನಕಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಹಾಗೂ ಕಾರ್ಯಾರಂಭ ಸಂಬಂಧ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್, ಉಪಕುಲಪತಿ ಹಾಗೂ ಶಾಸಕ ಶಿವಲಿಂಗೇಗೌಡ ಅವರು ಬುಧವಾರ ಸಭೆ ನಡೆಸಿದರು.
ಸಭೆ ಬಳಿಕ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಇರುವ ಭೂ ಸ್ವಾಧೀನ ಸಮಸ್ಯೆಗೆ ಪರಿಹಾರ ನೀಡಿ ಕಾಮಗಾರಿ ನಡೆಸಲಾಗುತ್ತಿದೆ. ರಾಮನಗರದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ಮಾಡಲು ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ. ವೈದ್ಯಕೀಯ ವಿವಿ ಕೇಂದ್ರ ಕಚೇರಿಯನ್ನು ರಾಮನಗರಕ್ಕೆ ಸ್ಥಳಾಂತರಗೊಳಿಸಲು ಸೂಚಿಸಿದ್ದೇನೆ. ಈ ವಿಚಾರವಾಗಿ ಈ ಹಿಂದೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.
ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಗೃಹ ಮಂಡಳಿಯಿಂದ ಜಮೀನು ಪಡೆದು ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುವುದು. ಕನಕಪುರದಲ್ಲಿ ಮೂಲಸೌಕರ್ಯ ಇಲ್ಲ ಎಂದು ಎನ್ಎಂಸಿಯಿಂದ ಅರ್ಜಿ ತಿರಸ್ಕರಿಸಲಾಗಿತ್ತು. ಹೀಗಾಗಿ ಮೂಲಸೌಕರ್ಯ ಹೆಚ್ಚಿಸಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

