ಮುಂಡರಗಿ: ರೈತರು ವೈವಿಧ್ಯಮಯ ಬೆಳೆಗಳನ್ನು ಬೆಳೆದು ಆದಾಯ ಹೆಚ್ಚಿಸಿಕೊಳ್ಳಬೇಕು ಎನ್ನುವ ಕಾರಣದಿಂದ ಸರ್ಕಾರ ತಾಲ್ಲೂಕಿನ ಎಲ್ಲ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸುತ್ತಲಿದೆ. ರೈತರು ಅದರ ಸದುಪಯೋಗ ಪಡೆದುಕೊಂಡು ಹೆಚ್ಚು ಆದಾಯ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದರು.
ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ತಾಲ್ಲೂಕಿನ ರೈತರಿಗೆ ರಿಯಾಯಿತಿ ದರದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತರ ವಾಸ್ತವಿಕ ಹಿಡುವಳಿ ಅಥವಾ ಗರಿಷ್ಠ ಎರಡು ಹೆಕ್ಟೇರ್ ಪ್ರದೇಶಕ್ಕೆ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು. ಎಲ್ಲಾ ಬಿತ್ತನೆ ಬೀಜಗಳಿಗೆ ರೈತರು ಕಡ್ಡಾಯವಾಗಿ ಬೀಜೋಪಚಾರ ಮಾಡಬೇಕು. ಪ್ರಮಾಣಿತ ಬೀಜವನ್ನು ಒಂದು ಬಾರಿ ಪಡೆದ ರೈತನಿಗೆ ಮುಂದಿನ ಮೂರು ವರ್ಷ ಅದೇ ಬೆಳೆಯ ಬಿತ್ತನೆ ಬೀಜವನ್ನು ನೀಡಲು ನಿಯಮಾವಳಿಯಲ್ಲಿ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.
ಬೀಜವನ್ನು ಪಡೆಯುವಾಗ ರೈತರು ಇಲಾಖೆ ನೀಡಿರುವ ಎಫ್.ಐ.ಡಿ. ಸಂಖ್ಯೆ ಅಥವಾ ಆಧಾರ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಹಾಗೂ ಜಮೀನಿನ ಉತಾರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಎಸ್.ಸಿ ಎಸ್.ಟಿ ರೈತರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಬಿತ್ತನೆ ಪೂರ್ವದಲ್ಲಿ ಕೃಷಿ ತಜ್ಷರು ಹಾಗೂ ಕೃಷಿ ಅಧಿಕಾರಿಗಳ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

