ಬೆಂಗಳೂರು: ಕಂದಾಯ ಇಲಾಖೆ ಆಡಳಿತದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಅನ್ಯ ಇಲಾಖೆಗಳ ಕಾರ್ಯದೊತ್ತಡ ನಿವಾರಣೆ, ಸೇವಾಭದ್ರತೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಸೆ.26 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಸಾಂಕೇತಿಕ ಪ್ರತಿಭಟನೆಗಳೂ ಆರಂಭವಾಗಿವೆ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದ ಬಿಸಿ ಗ್ರಾಮೀಣ ಪ್ರದೇಶಗಳಿಗೂ ತಟ್ಟಿದ್ದು, ಅತ್ಯಗತ್ಯವಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಣೆ, ವಿವಿಧ ಯೋಜನೆಗಳ ಫಲಾನುಭವಿಗಳ ಆಧಾರ್ ಜೋಡಣೆ ಇತ್ಯಾದಿ ಪ್ರಮುಖ ಕೆಲಸ-ಕಾರ್ಯಗಳು ಸ್ಥಬ್ಧವಾಗಿದೆ. ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟ ಮುಷ್ಕರದ ಬಳಿಕ ಎಚ್ಚತ್ತುಕೊಂಡಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಗ್ರಾಮ ಆಡಳಿತಾಧಿಕಾರಿಗಳ ಸಂಘಟನೆಯ ಪದಾಧಿಕಾರಿಗಳನ್ನು ಸೋಮವಾರ (ಸೆ. 30) ಮಾತುಕತೆಗೆ ಆಹ್ವಾನಿಸಿದ್ದಾರೆ.
ರಾಜ್ಯದಲ್ಲಿ ಇ-ಆಡಳಿತ ಜಾರಿಯಾದ ಮೇಲೆ 8000ಕ್ಕೂ ಹೆಚ್ಚು ಗ್ರಾಮ ಆಡಳಿತಾಧಿಕಾರಿಗಳು ಕಂದಾಯ ಇಲಾಖೆಯ ಕಾರ್ಯಗಳೊಟ್ಟಿಗೆ ಅನ್ಯ ಇಲಾಖೆಗಳ ಕೆಲಸಗಳನ್ನು ನಿಭಾಯಿಸುತ್ತಿದ್ದಾರೆ. 17 ವಿವಿಧ ಮೊಬೈಲ್ ತಂತ್ರಾಂಶ ಹಾಗೂ ವೆಬ್ ಅಪ್ಲಿಕೇಷನ್ ಮೂಲಕ ಬೆಳೆ ಸಮೀಕ್ಷೆ, ಮನೆಗಣತಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ವಿತರಣೆ, ಆಧಾರ್ ಜೋಡಣೆ, ಲ್ಯಾಂಡ್ ಬೀಟ್, ನಮೂನೆ 1-5, ಪೌತಿ ಖಾತೆ ಆಂದೋಲನ ಸೇರಿದಂತೆ ಹಲವು ಕಾರ್ಯಗಳನ್ನು ಆನ್ಲೈನ್ ಮೂಲಕವೇ ಮಾಡುತ್ತಿದ್ದಾರೆ. ಆದರೆ, ಗ್ರಾಮ ಆಡಳಿತಾಧಿಕಾರಿಗಳಿಗೆ ಸಮರ್ಪಕ ಸೌಲಭ್ಯ ಮಾತ್ರ ಸರ್ಕಾರ ನೀಡುತ್ತಿಲ್ಲ ಎಂಬುದು ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಆರೋಪವಾಗಿದೆ.
ಮೊಬೈಲ್ ತಂತ್ರಾಂಶದ ಮೂಲಕ ಮಾಡಬೇಕಾದ ಕೆಲಸಗಳಿಗೆ ಪ್ರತ್ಯೇಕ ಮೊಬೈಲ್, ಇಂಟರ್ ನೆಟ್ ಸೇವೆ ಒದಗಿಸಿಲ್ಲ. ವೆಬ್ ಅಪ್ಲಿಕೇಷನ್ ಗಳಲ್ಲಿ ಕಾರ್ಯ ನಿರ್ವಹಿಸಲು ಲ್ಯಾಪ್ ಟಾಪ್ ನೀಡದ ಕಾರಣ ಆಡಳಿತಾಧಿಕಾರಿಗಳಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

