Breaking News

ಕೊಪ್ಪಳದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಮೂಲ ಸೌಕರ್ಯದ ಕೊರತೆ

ಕೊಪ್ಪಳ: ಹೆಸರಾಂತ ಧಾರ್ಮಿಕ ಕ್ಷೇತ್ರಗಳಲ್ಲಿ ವರ್ಷಕ್ಕೊಮ್ಮೆಯೋ ಅಥವಾ ವಿಶೇಷ ಸಂದರ್ಭದಲ್ಲಿಯೋ ಲಕ್ಷಾಂತರ ಭಕ್ತರು ಒಂದೆಡೆ ಸೇರುವುದು ಸಹಜ. ಆದರೆ ಕೊಪ್ಪಳ ತಾಲ್ಲೂಕಿನ ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಿ ದರ್ಶನಕ್ಕೆ ವಾರಕ್ಕೆ ಎರಡು ಬಾರಿ ಹಾಗೂ ಪ್ರತಿ ಹುಣ್ಣಿಮೆಗೂ ಲಕ್ಷಾಂತರ ಭಕ್ತರು ಬರುವುದು ಸಾಮಾನ್ಯವಾಗಿದೆ.
ಕರ್ನಾಟಕ, ಆಂಧ್ರ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಸಾಕಷ್ಟು ಭಕ್ತರನ್ನು ಹೊಂದಿರುವ ಉತ್ತರ ಕರ್ನಾಟಕದ ಶಕ್ತಿ ದೇವತೆ ಎಂದೇ ಹೆಸರಾದ ಹುಲಿಗಿಗೆ ದೊಡ್ಡಮಟ್ಟದಲ್ಲಿ ಭಕ್ತ ಸಮೂಹವಿದೆ. ಪ್ರತಿ ತಿಂಗಳು ಸರಾಸರಿ ಕನಿಷ್ಠ ₹70 ಲಕ್ಷ ಆದಾಯ ಭಕ್ತರಿಂದಲೇ ಬರುತ್ತಿದ್ದರೂ ಅವರ ಅಗತ್ಯಕ್ಕೆ ತಕ್ಕಷ್ಟು ಸೌಲಭ್ಯಗಳಿಲ್ಲ. ಜಿಲ್ಲಾಕೇಂದ್ರದಿಂದ 20 ಕಿ.ಮೀ. ದೂರದಲ್ಲಿರುವ ಈ ದೇವಸ್ಥಾನಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಶಕ್ತಿ ಯೋಜನೆ ಜಾರಿ ಬಳಿಕವಂತೂ ಮಹಿಳಾ ಭಕ್ತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.
ಅವರ ಅಗತ್ಯಕ್ಕೆ ತಕ್ಕಷ್ಟು ಕುಡಿಯುವ ನೀರು, ಶೌಚಾಲಯ, ತಂಗಲು ವ್ಯವಸ್ಥೆ, ಅವುಗಳ ನಿರ್ವಹಣೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿಲ್ಲ. ಇದರಿಂದಾಗಿ ಎಲ್ಲೆಂದರಲ್ಲಿ ಊಟ ಮಾಡುವುದು, ದೇವಸ್ಥಾನದ ಮುಖ್ಯ ದ್ವಾರದಿಂದ ಹೋಗುವ ಮಾರ್ಗದಲ್ಲಿಯೇ ಮಲಗುವುದು, ತ್ಯಾಜ್ಯ ಚೆಲ್ಲಲಾಗುತ್ತಿದೆ. ಇದೆಲ್ಲವನ್ನು ನಿಯಂತ್ರಿಸಲು ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಹುಲಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧಿಕಾರಿಗಳು ಪ್ರಯತ್ನಿಸುತ್ತಿದ್ದರೂ ಸಾಕಾಗುತ್ತಿಲ್ಲ.
ದೇವಸ್ಥಾನದ ಜಾಗವನ್ನು ವಿಸ್ತರಣೆ ಮಾಡಬೇಕು, ಹೊಸ ಯೋಜನೆಗಳೊಂದಿಗೆ ನವೀಕರಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಇದಕ್ಕಾಗಿ ಅನೇಕ ಬಾರಿ ನೀಲನಕ್ಷೆಗಳನ್ನು ರೂಪಿಸಿ ಪದೇ ಪದೇ ಬದಲಿಸಲಾಗಿದೆ. ಆದರೆ ಅನುಷ್ಠಾನಕ್ಕೆ ಮಾತ್ರ ಬಂದಿಲ್ಲ. ಮುಖ್ಯವಾಗಿ ಸಾರ್ವಜನಿಕರಿಗೆ ಯಥೇಚ್ಛವಾಗಿ ಸಿಗುವಂತೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕಿದೆ. ದೇವಸ್ಥಾನದ ಹಿಂಭಾಗದಲ್ಲಿರುವ ಸ್ನಾನಘಟ್ಟದ ಸ್ವಚ್ಛತೆ, ಹೆಣ್ಣುಮಕ್ಕಳು ಬಟ್ಟೆ ಬದಲಿಸಲು ನೂರಾರು ಸಂಖ್ಯೆಯಲ್ಲಿ ಸಣ್ಣ ಸಣ್ಣ ಕೊಠಡಿಗಳನ್ನು ನಿರ್ಮಿಸುವ ಅಗತ್ಯವಿದೆ.
ಈ ಕುರಿತು, ಹುಲಿಗಿಯ ಅಭಿವೃದ್ಧಿಗೆ ಹಲವು ವರ್ಷಗಳ ಹಿಂದೆಯೇ ಮಹಾನಕ್ಷೆ ರೂಪಿಸಲಾಗಿದ್ದು ಈ ಕುರಿತು ಸಚಿವರ ಅಧ್ಯಕ್ಷತೆಯಲ್ಲಿ ಚರ್ಚೆ ನಡೆಯಲಿದೆ. ಇದು ಅನುಷ್ಠಾನಕ್ಕೆ ಬರುತ್ತದೆಯೇ ಎನ್ನುವುದು ಚರ್ಚೆಗೆ ಕಾರಣವಾಗಿದೆ. ಮಹಾನಕ್ಷೆಗೆ ಅನುಮೋದನೆ ಪಡೆಯುವುದು ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಭಕ್ತರಿಗೆ ಅನುಕೂಲ ಕಲ್ಪಿಸಲು ಆದ್ಯತೆ ನೀಡಲಾಗುತ್ತದೆ ಎಂದು ಹುಲಿಗಿ ದೇವಸ್ಥಾನದ ಇಒ ಪ್ರಕಾಶ ತಿಳಿಸಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *