Breaking News

ಅಪರಾಧಿಗಳಿಗೆ ಹೆಚ್ಚಿನ ಶಿಕ್ಷೆ ಆಗುವಂತೆ ಸಮರ್ಥವಾದ, ಪುರಾವೆ ಸಲ್ಲಿಸಿ:ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ನ್ಯಾಯಾಲಯಗಳಲ್ಲಿ ಕಾಲಮಿತಿಯಲ್ಲಿ ಪ್ರಕರಣಗಳು ಇತ್ಯರ್ಥವಾಗುವಂತೆ ಕ್ರಮವಹಿಸಿ, ಅಪರಾಧಿಗಳಿಗೆ ಹೆಚ್ಚಿನ ಶಿಕ್ಷೆ ಆಗುವಂತೆ ಸಮರ್ಥವಾದ ಮತ್ತು ಪುರಾವೆಗಳನ್ನು ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಎಸ್.ಸಿ., ಎಸ್.ಟಿ., ದೌರ್ಜನ್ಯ ತಡೆ ಕಾಯ್ದೆ ಪ್ರಗತಿ ಪರಿಶೀಲನೆ ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆ ಜರುಗಿಸಿ, ಮಾತನಾಡಿದರು.

ಕಳೆದ ಜೂನ್ ತಿಂಗಳಲ್ಲಿ 8, ಜಿಲೈ ತಿಂಗಳಲ್ಲಿ 12 ಮತ್ತು ಆಗಸ್ಟ್ ತಿಂಗಳಲ್ಲಿ 5 ಪ್ರಕರಣಗಳು ಸೇರಿ 2014 ರಿಂದ ಇಲ್ಲಿವರೆಗೆ ಅಂದರೆ ಕಳೆದ 10 ವರ್ಷಗಳಲ್ಲಿ ಒಟ್ಟು 213 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 5 ಪ್ರಕರಣಗಳು ಇತ್ಯರ್ಥವಾಗಿದ್ದು, 208 ಪ್ರಕರಣಗಳು ಬಾಕಿ ಇವೆ ಮತ್ತು ಬಾಕಿ ಪ್ರಕರಣಗಳ ಪೈಕಿ 18 ಪ್ರಕರಣಗಳಲ್ಲಿ ಉಚ್ಚ ನ್ಯಾಯಾಲಯದಲ್ಲಿ ತಡೆ ಆಜ್ಞೆ ಇದೆ. ಪ್ರತಿ ಪ್ರಕರಣವನ್ನು ಸೂಕ್ತವಾಗಿ ಪರಿಶೀಲಿಸಿ, ಆದಷ್ಟು ಬೇಗ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು ಎಂದು ಅವರು ಹೇಳಿದರು.

ದೌರ್ಜನ್ಯ ಪ್ರಕರಣಗಳಿಗೆ ಮಂಜೂರಿಯಾದ ಪರಿಹಾರ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಬಡವರಿಗೆ, ಎಸ್.ಸಿ., ಎಸ್.ಟಿ ಜನರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಿ, ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಬೇಕೆಂದು ಅಧಿಕಾರಿಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಅನುಕಂಪ ಆಧಾರಿತ ಉದ್ಯೋಗ ನೀಡಲು ವಿಳಂಬ ಮಾಡಬಾರದು, ಅರ್ಹರು ಇದ್ದಲ್ಲಿ ನಿಯಮಾವಳಿ ಪ್ರಕಾರ ತಕ್ಷಣ ಉದ್ಯೋಗ ನೀಡಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಭೂ ಒಡೆತನ ಯೋಜನೆ ಅನುಷ್ಠಾನಕ್ಕೆ ಅಗತ್ಯ ಭೂಮಿ ಗುರುತಿಸಿ, ಖರೀದಿಗೆ ಅಗತ್ಯ ಕ್ರಮವಹಿಸಬೇಕು ಎಂದು ಅವರು ಹೇಳಿದರು.

ವಸತಿ ನಿಲಯಪಾಲಕರು ಸ್ಥಾನಿಕವಾಗಿರಿ ಗ್ರಾಮೀಣ ಭಾಗದ ವಿವಿಧ ವಸತಿನಿಲಯಗಳಲ್ಲಿ ನೇಮಕವಾಗಿರುವ ವಸತಿನಿಲಯ ಪಾಲಕರು ಕಡ್ಡಾಯವಾಗಿ ತಾವು ಕರ್ತವ್ಯ ನಿರ್ವಹಿಸುವ ಹಾಸ್ಟೆಲ್‍ಗಳಲ್ಲಿ ಇರಬೇಕು. ವಸತಿನಿಲಯಗಳಲ್ಲಿ ಸ್ವಚ್ಛತೆ, ವಿದ್ಯಾರ್ಥಿಗಳ ಯೋಗಕ್ಷೇಮದ ಬಗ್ಗೆ ಕಾಳಜಿ ಇರಬೇಕು.
ಕೆಲವು ವಾರ್ಡನ್‍ಗಳು, ಹಾಸ್ಟೆಲ್‍ಗಳಲ್ಲಿ ರಾತ್ರಿವೇಳೆ ಮತ್ತು ಬಹುತೇಕ ಸಂದರ್ಭದಲ್ಲಿ ಇರುವುದಿಲ್ಲ ಎಂಬ ದೂರು ಬಂದಿವೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ವಾರ್ಡನ್ ಹಾಸ್ಟೆಲ್‍ದಲ್ಲಿ ಇರದಿದ್ದರೆ, ವಾರ್ಡನ್ ಜೊತೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳ ಮೇಲೆ ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಡಿವೈಎಸ್‍ಪಿ ಎಸ್.ಎಮ್.ನಾಗರಾಜ, ಸಹಾಯಕ ಪೊಲೀಸ ಆಯುಕ್ತ ವಿಜಯಕುಮಾರ ಟಿ., ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ತಹಸಿಲ್ದಾರರಾದ ಡಿ.ಎಚ್.ಹೂಗಾರ, ಪ್ರಕಾಶ ನಾಶಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ವರದಿ ಸಲ್ಲಿಸಿದರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *