ಬೆಂಗಳೂರು: ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ (ವೃದ್ಧಾಪ್ಯ ವೇತನ) ನೀಡಲಾಗುತ್ತಿದೆ. ಅವರ ಮಾಸಾಶನ ಹೆಚ್ಚಳದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಗರದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಹಿರಿಯ ನಾಗರಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ವೇದಿಕೆಯಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾಸಾಶನ ಹೆಚ್ಚಿಸಬೇಕೆಂಬ ಹಿರಿಯ ನಾಗರಿಕರ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ, ಇತ್ತೀಚಿನ ವರ್ಷಗಳಲ್ಲಿ ವೃದ್ಧಾಶ್ರಮ ಸೇರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ವೃದ್ಧಾಶ್ರಮಕ್ಕೆ ಬಂದವರು ಸಂತೋಷದಿಂದ, ಆರೋಗ್ಯದಿಂದ ಇರುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ವೃದ್ಧಾಪ್ಯ ವೇತನ ಹೆಚ್ಚಳದ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ,ರಾಜ್ಯದಲ್ಲಿ ಸದ್ಯ 57.91 ಲಕ್ಷ ಹಿರಿಯ ನಾಗರಿಕರಿದ್ದಾರೆ. ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಒದಗಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ. ಆರೋಗ್ಯ ವಿಮೆ ಯೋಜನೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

