ಬೆಂಗಳೂರು: ಮಹಾತ್ಮ ಗಾಂಧೀಜಿ ಅವರು ಕರ್ನಾಟಕದ ಸುಮಾರು 50 ಸ್ಥಳಗಳಿಗೆ ವಿವಿಧ ಸಂದರ್ಭದಲ್ಲಿ ಭೇಟಿ ನೀಡಿದ್ದಾರೆ ಅವರು ಭೇಟಿ ನೀಡಿದ್ದ ಸ್ಥಳಗಳಲ್ಲಿ ಗಾಂಧೀಜಿ ಅವರ ಸ್ಮಾರಕಗಳನ್ನು ನಿರ್ಮಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ಕರ್ನಾಟಕ ಗಾಂಧೀ ಸ್ಮಾರಕ ನಿಧಿಯು ಗಾಂಧಿ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮಜಯಂತಿ ವಿಶ್ವ ಅಹಿಂಸಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನದ ಶತಾಬ್ಧಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು 25 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇಂದಿನಿಂದ 2025ರ ಅ.2ರವರೆಗೆ ಒಂದು ವರ್ಷಗಳ ಕಾಲ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇಖಕ ಡಾ. ನಟರಾಜ್ ಹುಳಿಯಾರ್ ಅವರಿಗೆ ಜಯಶ್ರೀ ದತ್ತಿ ಪುರಸ್ಕೃತ ಎಲ್ಲರ ಗಾಂಧೀ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಎಸ್ಎಸ್ಎಸ್ ರಾಜ್ಯಾಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಅವರಿಗೆ ಮಹಾತ್ಮ ಗಾಂಧೀಜಿ ಯುವ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗಾಂಧೀ ಸ್ಮಾರಕ ನಿಧಿ ಉಪಾಧ್ಯಕ್ಷ ಪ್ರೊ. ಜಿ.ಬಿ. ಶಿವರಾಜು, ಕಾರ್ಯದರ್ಶಿ ಎನ್.ಆರ್. ವಿಶುಕುಮಾರ್, ಗೌರವ ಕಾರ್ಯದರ್ಶಿ ಎಂ.ಸಿ. ನರೇಂದ್ರ ಸೇರಿ ಹಲವರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

