ಬೆಂಗಳೂರು: ಅಲ್ಪಸಂಖ್ಯಾತರ ಸಮುದಾಯದ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲು ವಕ್ಫ್ ಬೋರ್ಡ್ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪದವಿ ಪೂರ್ವ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಶನಿವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಬೋರ್ಡ್ ವತಿಯಿಂದ ತಿರುಮೇನಹಳ್ಳಿಯಲ್ಲಿರುವ ಹಜ್ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಮದ್ರಸಾಗಳಲ್ಲಿ ಔಪಚಾರಿಕ ಶಿಕ್ಷಣಕ್ಕೆ ಚಾಲನೆ, 26 ಜಿಲ್ಲೆಗಳಿಗೆ ಆಂಬ್ಯುಲೆನ್ಸ್, ಫ್ರೀಝರ್ ಹಾಗೂ 15 ಮಹಿಳಾ ಕಾಲೇಜುಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಇದೀಗ 15 ಜಿಲ್ಲೆಗಳಲ್ಲಿ ಹೆಣ್ಣು ಮಕ್ಕಳಿಗಾಗಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಶಂಕು ಸ್ಥಾಪನೆ ನೆರವೇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಯಲ್ಲೂ ಒಂದು ಕಾಲೇಜು ಸ್ಥಾಪನೆ ಮಾಡಲು ತೀರ್ಮಾನ ಮಾಡಲಾಗಿದೆ. ಹಿಜಾಬ್ ವಿವಾದದ ನಂತರ ಸಮುದಾಯದ ಹೆಣ್ಣು ಮಕ್ಕಳು ಆತಂಕಗೊಂಡು ಉನ್ನತ ಶಿಕ್ಷಣದಿಂದ ದೂರ ಸರಿಯುವ ವಾತಾವರಣ ನಿರ್ಮಾಣವಾಗಿತ್ತು. ಆ ಹಿನ್ನೆಲೆಯಲ್ಲಿ ಮಹಿಳಾ ಕಾಲೇಜು ಸ್ಥಾಪಿಸುವ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಯಿತು ಎಂದು ಅವರು ಹೇಳಿದರು.
ಈ ಮಹಿಳಾ ಕಾಲೇಜುಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುವುದು. ನಾನು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ನಂತರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ನಮ್ಮ ಇಲಾಖೆಯ ಬಜೆಟ್ ನ ಶೇ.65 ರಿಂದ 70ರಷ್ಟು ಮೊತ್ತ ಇದಕ್ಕೆ ಮೀಸಲಿಡಲಾಗಿದೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

