ಬೆಂಗಳೂರು: ರಾಜ್ಯದಲ್ಲಿ ನಮ್ಮ ಸರ್ಕಾರವು ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಅದನ್ನು ಕೋಲ್ಡ್ ಸ್ಟೋರೆಜ್ನಲ್ಲಿಟ್ಟುಬಿಟ್ಟರು ಎಂದು ವಿಪಕ್ಷ ನಾಯಕರು ಟೀಕಿಸುತ್ತಿದ್ದರು.
ಯಾಕೆ ಅಷ್ಟೊಂದು ಹಣ ಖರ್ಚು ಮಾಡಿದರು, ಯಾಕೆ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ ಪ್ರಶ್ನಿಸಿದರು. ಇದೀಗ ಅದನ್ನು ಜಾರಿಗೊಳಿಸುತ್ತೇವೆ ಎಂದಾಗ ನುಂಗಲಾರದ ತುತ್ತಾಗಿದೆ. ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯದ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಜಾತಿಗಣತಿ ವರದಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸಹಾಯವಾಗುತ್ತದೆ ಎಂದು ಎಲ್ಲರು ಹೇಳುತ್ತಿದ್ದಾರೆ. ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೇ, ಎಂದು ಅವರು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಜನಗಣತಿ ಮಾಡಬೇಕು ಎಂದು ನಿರ್ಧರಿಸಿದ್ದು, ಈಗಾಗಲೇ ತಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಪ್ರಧಾನಮಂತ್ರಿ ಭೇಟಿಗೆ ಹೋದಾಗ ಜನಗಣತಿ ಮಾಡುವುದಾಗಿ ಹೇಳಿದ್ದರು. 2026 ಅಥವಾ 2027ರಲ್ಲಿ ಪ್ರಾರಂಭಿಸಿ 2028 ಚುನಾವಣೆಗೆ ಸಿಗುತ್ತದೆ ಎಂದಿದ್ದರು. ಆ ಸಂದರ್ಭದಲ್ಲಿಯೂ ಇದೇರೀತಿ ವಿರೋಧಿಸುತ್ತಾರೆಯೇ, ಸರ್ಕಾರ ಅಧಿಕೃತವಾಗಿ ಜಾತಿಗಣತಿ ಮಾಡಿದೆ. ಯಾರೋ ನಾಲ್ಕು ಜನ ಸೇರಿ ಮಾಡಿರುವುದಲ್ಲ ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ನಡೆಯಬೇಕು. ಈಗ ಏರುಪೇರಾಗಿದೆ ಹತ್ತುವರ್ಷಕ್ಕೆ ಶೇ.15ರಷ್ಟು ಜನಸಂಖ್ಯೆ ಹೆಚ್ಚಾಗಿರುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ ಇದರ ಆಧಾರದ ಮೇಲೆ ಮಾಡಬಹುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





