ಹುಬ್ಬಳ್ಳಿ: ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ಸಾರವರ್ಧಿತ ಅಕ್ಕಿ ತಯಾರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ.
ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ ಎಂದರು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿ ಮತ್ತು ಅಂತ್ಯೋದಯ ಅನ್ನ ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೆ 35 ಕೆಜಿ ಆಹಾರ ಧಾನ್ಯ ವಿತರಿಸುತ್ತಿದ್ದು, ಇದಕ್ಕೆ ಶೇ.1 ರಷ್ಟು ಪೌಷ್ಟಿಕಾಂಶಗಳನ್ನು ಸೇರಿಸಿ, ಬಲವರ್ಧಿತ ಅಕ್ಕಿಯಾಗಿ ವಿತರಿಸಲಾಗುವುದು ಎಂದು ತಿಳಿಸಿದರು.
ದೇಶಾದ್ಯಂತ ಈ ಪೌಷ್ಟಿಕಾಂಶಯುಕ್ತ ಅಕ್ಕಿ ವಿತರಣೆಗೆ 18 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಕಡುಬಡವರನ್ನು ರಕ್ತಹೀನತೆಯಿಂದ ಕಾಪಾಡಲು ಪ್ರಯೋಜನವಾಗಲಿದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

