ಹುಬ್ಬಳ್ಳಿ : ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಈ ಬಾರಿ 69 ಜನ ಸಾಧಕರಿಗೆ ಧೀಮಂತ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಮೇಯರ್ ರಾಮಪ್ಪ ಬಡಿಗೇರ ತಿಳಿಸಿದ್ದಾರೆ.
ರಾಜ್ಯೋತ್ಸವ ಪ್ರಯುಕ್ತ ನಡೆದ ವಿವಿಧ ಸಮಿತಿಗಳ ಅಧ್ಯಕ್ಷರ ಹಾಗೂ ಅಧಿಕಾರಿಗಳ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಹಿತ್ಯ, ಕ್ರೀಡೆ, ಸಮಾಜಸೇವೆ, ವೈದ್ಯಕೀಯ, ಕಲೆ, ರಂಗಭೂಮಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ 16 ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು. ಅ. 17ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಈ ಬಾರಿ ಧೀಮಂತ ಪ್ರಶಸ್ತಿಗೆ ಅರ್ಜಿ ಹಾಕಲು ಯಾವುದೇ ವಯೋಮಿತಿ ನಿಗದಿಪಡಿಸಿಲ್ಲ. ಪಾರದರ್ಶಕವಾಗಿ ಸಾಧಕರನ್ನು ಆಯ್ಕೆ ಮಾಡಲಾಗುವುದು. ಪ್ರಶಸ್ತಿ ಪ್ರದಾನಕ್ಕೂ ಕಾರ್ಯಕ್ರಮ ನಡೆಯುವುದಕ್ಕೂ ಪೂರ್ವದಲ್ಲಿ ಒಂದು ದಿನ ಮುಂಚೆ ಪ್ರಶಸ್ತಿಗೆ ಆಯ್ಕೆಯಾಗಿರುವವರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಅ.31ರಂದು ಧಾರವಾಡದ ಆರ್ಎಲ್ಎಸ್ ಕಾಲೇಜಿನಿಂದ ಕಡಪಾ ಮೈದಾನದವರೆಗೆ ಮತ್ತು ನ. 1ರಂದು ಹುಬ್ಬಳ್ಳಿಯ ಸಿದ್ಧಾರೂಢ ಮಠದಿಂದ ನೆಹರೂ ಮೈದಾನದವರೆಗೆ ಮೆರವಣಿಗೆ ವಿವಿಧ ಕಲಾ ತಂಡಗಳೊಂದಿಗೆ ಜರುಗಲಿದೆ. ಮೆರವಣಿಗೆಯಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ನ.11ರಂದು ಧಾರವಾಡದ ಕಡಪಾ ಮೈದಾನದಲ್ಲಿ ರಾಜ್ಯೋತ್ಸವದ ವೇದಿಕೆ ಕಾರ್ಯಕ್ರಮ ಮತ್ತು ನ.12ರಂದು ಇಂದಿರಾ ಗಾಜಿನ ಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಧೀಮಂತ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

