ನವದೆಹಲಿ: ಕೇಂದ್ರ ಸರ್ಕಾರದ ಚಾಲ್ತಿಯಲ್ಲಿರುವ ಯೋಜನೆಗಳ ಅನುಷ್ಟಾನ ಕುರಿತು ಪರಿಶೀಲನೆ ಮತ್ತು ಹೊಸ ಯೋಜನೆಗಳನ್ನು ರೂಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಮೇಲ್ವಿಚಾರಣಾ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ರಚಿಸಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ತಂಡವು ದೇಶದಾದ್ಯಂತ ಸರ್ಕಾರದ ಹೊಸ ಮತ್ತು ಚಾಲ್ತಿಯಲ್ಲಿರುವ ಕೇಂದ್ರ ಯೋಜನೆಗಳನ್ನು ಪರಿಶೀಲಿಸುತ್ತದೆ. ಈ ತಂಡವು ಕೇಂದ್ರ ಬಜೆಟ್, ಅಧೀನ ಕಾನೂನು ಮತ್ತು ಇತರ ಮೂಲಸೌಕರ್ಯ ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸುತ್ತದೆ.
ಇನ್ನು ತಂಡದ ಮೊದಲ ಸಭೆಯು ಅ.18 ರಂದು ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ನಡೆದಿದ್ದು, ರೈಲ್ವೇ ಮಂಡಳಿಯ ಅಧ್ಯಕ್ಷರು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲ ಕಾರ್ಯದರ್ಶಿಗಳು ಹೈಬ್ರಿಡ್ ಮೋಡ್ ಮೂಲಕ ಈ ಸಭೆಯಲ್ಲಿ ಭಾಗವಹಿಸಿದ್ದರು. ಈ ತಂಡ ಪ್ರತಿ ತಿಂಗಳು ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.
ತಂಡವು 2014ರಿಂದ ಇಲ್ಲಿಯವರೆಗೆ ನಡೆದಿರುವ ಕಾಮಗಾರಿಗಳನ್ನು ಪರಿಶೀಲಿಸುತ್ತದೆ. ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ, ಈ ತಂಡವು 2014 ರಿಂದ ಘೋಷಿಸಲಾದ ಯೋಜನೆಗಳನ್ನು ಅಂದರೆ ಮೊದಲ ಎನ್ಡಿಎ ಸರ್ಕಾರದ ಅವಧಿಯಲ್ಲಿ ಅನುಷ್ಠಾನಗೊಂಡಿರುವ ಯೋಜನೆಗಳನ್ನೂ ಸಹ ಪರಿಶೀಲಿಸುತ್ತದೆ.
ಯಾವುದೇ ಯೋಜನೆಯಲ್ಲಿ ಯಾವುದೇ ರೀತಿಯ ವಿಳಂಬ ಅಥವಾ ಯಾವುದೇ ರೀತಿಯ ಸಮಸ್ಯೆ ಕಂಡುಬಂದರೆ, ಈ ತಂಡವು ಯೋಜನೆಯ ಸಂಬಂಧಿಸಿದ ಕಾರ್ಯದರ್ಶಿಗಳನ್ನು ಸಂಪರ್ಕಿಸುತ್ತದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

