ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟಕ್ಕೆ ನಿನ್ನೆ ಮತ್ತೊಂದು ಅವಘಡ ನಡೆದಿತ್ತು. ಹೆಣ್ಣೂರು ಬಳಿಯ ಬಾಬುಸಾ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು.
ಇದೀಗ ಈ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಪ್ರಾಣಹಾನಿಯಾಗಿರುವುದು ಬೇಸರ ನನಗೆ ತುಂಬಾನೆ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನಾನು ಸಾಂತ್ವನ ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಅಲ್ಲದೇ, ಈ ದುರಂತದಲ್ಲಿ ಮೃತಪಟ್ಟವರು ಮತ್ತು ಗಾಯಾಳುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರವನ್ನೂ ಘೋಷಿಸಿದ್ದು. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ನೀಡುವುದಾಗಿ ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ.
ನಿನ್ನೆಯ ಭಾರೀ ಮಳೆಗೆ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಸಿಲುಕಿ ಆರಂಭದಲ್ಲಿ ನಾಲ್ಕು ಮಂದಿ ಕಾರ್ಮಿಕರ ಸಾವನ್ನಪ್ಪಿದ್ದರು. ನಂತರ ಸಾವನ್ನಪ್ಪಿದ ಕಾರ್ಮಿಕರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇದುವರೆಗೂ 13 ಕಾರ್ಮಿಕರನ್ನ ರಕ್ಷಣೆ ಮಾಡಲಾಗಿದ್ದು, ಗಾಯಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಎನ್ ಡಿ ಆರ್ ಎಫ್ ನಿಂದ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಲಾಗಿದೆ.
ಇನ್ನು, ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಸಂತೋಷ್ ಲಾಡ್, ಶಾಸಕ ಭೈರತಿ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪಾಲಿಕೆ ಕಮಿಷನರ್, ಮುಖ್ಯ ಇಂಜಿನಿಯರ್ ಡಿಸಿಎಂಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತ ಘಟನಾ ಸ್ಥಳಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಲಿಕೆ ಕಮಿಷನರ್, ಇಂಜಿನಿಯರ್ರಿಂದ ಘಟನೆಯಲ್ಲಿ ಗಾಯಗೊಂಡವರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ನಿನ್ನೆ ಈ ಘಟನೆ ಬಗ್ಗೆ ಮಾತನಾಡಿದ್ದ ಸಂತೋಷ್ ಲಾಡ್, ಸುಮಾರು 20 ಮಂದಿ ಕೆಲಸ ಮಾಡುತ್ತಿದ್ದರು ಅನ್ನೋ ಮಾಹಿತಿ ಇದೆ. ಈಗ 13 ಜನರ ರಕ್ಷಣೆ ಆಗಿದೆ, ಉಳಿದವರ ರಕ್ಷಣಾ ಕಾರ್ಯ ಸಾಗಿದೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕ ಇಲಾಖೆಯಿಂದ ಸೂಕ್ತ ಪರಿಹಾರ ನೀಡಲಾಗುವುದು. ಕೆಲವು ವಲಸಿಗ ಕಾರ್ಮಿಕರು ಕೂಡ ಇದ್ದಾರೆ. ಅವರ ಬಗ್ಗೆಯೂ ಪರಿಶೀಲನೆ ನಡೆಸಿ ಪರಿಹಾರ ವ್ಯವಸ್ಥೆ ಮಾಡುತ್ತೇವೆ ಅಂತಾ ಸಚಿವರು ಹೇಳಿದ್ದರು.
ಸದ್ಯ ಘಟನೆಗೆ ಸಂಬಂಧಿಸಿದಂತೆ ಕುಸಿದಿರುವ ಬಹು ಅಂತಸ್ತಿನ ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಿದ್ದ ಹಾಗೂ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದ ಸಂಗತಿ ಪೊಲೀಸ್ ತನಿಖೆಯಲ್ಲಿ ದೃಢಪಟ್ಟಿದ್ದು, ಪ್ರಕರಣ ಸಂಬಂಧ ಪಾಲಿಕೆ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಕಟ್ಟಡದ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಸರಿಯಾದ ಪಿಲ್ಲರ್ ಹಾಕದೆ, ಕಳಪೆ ಎಂ-ಸ್ಯಾಂಡ್, ಕಂಬಿ ಹಾಗೂ ಸಿಮೆಂಟ್ ಬಳಸಿ ಏಳು ಅಂತಸ್ತಿನ ಕಟ್ಟಡ ನಿರ್ಮಿಸಲಾಗಿತ್ತು. ಕಳಪೆ ಕಾಮಗಾರಿಯಿಂದಾಗಿ ಇಡೀ ಕಟ್ಟಡ ಭಾರೀ ಮಳೆಗೆ ಕುಸಿದು ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

