ಚಿತ್ತಾಪುರ: ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ₹ 63 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡಿಗಲ್ಲು ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯ 2023-24ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಯೋಜನೆಯಡಿ ₹ 4.50 ಕೋಟಿ ವೆಚ್ಚದಲ್ಲಿ ಚಿತ್ತಾಪುರ ಪಟ್ಟಣದಲ್ಲಿ ಸರ್ಕಾರಿ ಪ್ರೌಢಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ, ₹ 4 ಕೋಟಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಪ್ರಿಯಾಂಕ್ ಅಡಿಗಲ್ಲು ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯ 2023-24ನೇ ಸಾಲಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ₹ 25 ಕೋಟಿ ವೆಚ್ಚದಲ್ಲಿ ರಾಜ್ಯ ಹೆದ್ದಾರಿ-126ರ ಮರಗೋಳ ಕ್ರಾಸದಿಂದ ತೆಂಗಳಿ ಗ್ರಾಮದವರೆಗೆ, ಮಲಘಾಣ ತಾಂಡಾದಿಂದ ಹಳೆ ಹೆಬ್ಬಾಳವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, 2023-24ನೇ ಸಾಲಿನ ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಯೋಜನೆಯ ₹ 25.70 ಕೋಟಿ ವೆಚ್ಚದಲ್ಲಿ ಚಿತ್ತಾಪುರ 2ನೇ ಹಂತದ ಪಿ.ಚಿತ್ತಾಪುರ ಗ್ರಾಮ ವ್ಯಾಪ್ತಿಯಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸುವ ಕಾಮಗಾರಿಯಡಿ ಸಂಬಂಧಿತ ಜಮೀನುಗಳಲ್ಲಿ ರಸ್ತೆಗಳ ಅಭಿವೃದ್ಧಿ, ಚರಂಡಿ ನಿರ್ಮಾಣ, ಕಲ್ವರ್ಟ್ ನಿರ್ಮಾಣ, ನೀರು ಸರಬರಾಜು, ಮೇಲ್ಮಟ್ಟದ ಜಲಸಂಗ್ರಹಗಾರ, ವಿದ್ಯುತ್ ಕಾಮಗಾರಿ ಹಾಗೂ ಇತರೆ ಅವಶ್ಯಕ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಕೃಷಿ ಇಲಾಖೆಯ 2024-25ನೇ ಸಾಲಿನ ವಿವಿಧ ಯೋಜನೆಯಡಿ ರಿಯಾಯಿತಿ ದರದಲ್ಲಿ ಸಚಿವ ಪ್ರಿಯಾಂಕ್ ವಿವಿಧ ಉಪಕರಣಗಳನ್ನು ರೈತರಿಗೆ ವಿತರಿಸಿದರು. ಪುರಸಭೆಯಿಂದ ಹೊಸದಾಗಿ ಖರೀದಿಸಿದ್ದ ಜೆಸಿಬಿ ಯಂತ್ರ, ಕಸ ನಿರ್ವಹಣೆಯ ಮೂರು ಆಟೊಗಳನ್ನು ಪ್ರಿಯಾಂಕ್ ಅವರು ಹಸ್ತಾಂತರಿಸಿ, ಪಶು ಇಲಾಖೆಯ ಯೋಜನೆಯಡಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಮೂದ್ ಸಾಹೇಬ್, ಕಾಂಗ್ರೆಸ್ ಮುಖಂಡರಾದ ನಾಗರೆಡ್ಡಿ ಪಾಟೀಲ್ ಕರದಾಳ, ಸೋಮಶೇಖರ ಹಿರೇಮಠ, ಶಿವರುದ್ರ ಭೀಣಿ, ಮುಕ್ತಾರ ಪಟೇಲ್, ಮಲ್ಲಪ್ಪ ಹೊಸಮನಿ, ಸೇಡಂ ಉಪ ವಿಭಾಗಾಧಿಕಾರಿ ಪ್ರಭುರೆಡ್ಡಿ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್, ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸೇರಿದಂತೆ ಅನೇಕ ಅಧಿಕಾರಿಗಳು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

