ಬೀದರ್: ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಭೆಯ ಬಳಿಕ ವಿವರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ ಯಾನ ಸೇವೆ ಸ್ಥಗಿತವಾಗಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಸಬ್ಸಿಡಿ ನೀಡಿ ಬೀದರ್ ಗೆ ವಾಯುಯಾನ ಕಲ್ಪಿಸಲು ನಿರ್ಧರಿಸಿದೆ ಎಂದರು.
ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ ಸಬ್ಸಿಡಿ ಹಣದ ಪೈಕಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಶೇ. 70ರಷ್ಟು ಮತ್ತು ರಾಜ್ಯ ಸರ್ಕಾರ ಶೇ.30 ಭರಿಸಲಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ವಿಮಾನಯಾನ ಸೇವೆ ಪುನಾರಂಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ದೇಶದಲ್ಲೇ ವಿಶಿಷ್ಟವಾದ ಬಿದರೀ ಕಲೆಗೆ ಬೀದರ ಜಿಲ್ಲೆ ವಿಶ್ವ ವಿಖ್ಯಾತವಾಗಿದೆ. ಹೀಗಾಗಿ ಕ್ಷೇತ್ರವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಪಡಿಸಬೇಕಾದರೆ ನಾಗರೀಕ ವಿಮಾನಯಾನ ಸೇವೆ ಅತ್ಯಗತ್ಯ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.
ಬಸವ ಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣವಾಗುತ್ತಿದ್ದು, ಭವಿಷ್ಯದಲ್ಲಿ ಬೀದರ್ ವಾಯುಯಾನಕ್ಕೆ ಹೆಚ್ಚಿನ ಬೇಡಿಕೆ ಬರಲಿದೆ. ಜನರ ಬೇಡಿಕೆಯ ಸಮಯಕ್ಕೆ ಅನುಗುಣವಾಗಿ ವಿಮಾನಯಾನ ಸೇವೆ ಕಲ್ಪಿಸಿದಲ್ಲಿ ವಿಮಾನಯಾನ ಪೂರೈಕೆ ಸಂಸ್ಥೆಗೂ ನಷ್ಟವಾಗುವುದಿಲ್ಲ ಜನರಿಗೂ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news

