ಬೆಂಗಳೂರು: ಕನ್ನಡ ಭಾಷೆ ನೆಲ ಜಲ, ಸಂಸ್ಕೃತಿ, ಆಚಾರ-ವಿಚಾರ, ಸಂರಕ್ಷಣೆಯ ವಿಚಾರದಲ್ಲಿ ಸರಕಾರ ವಿಶೇಷ ಕಾಳಜಿ ತೋರಿದೆ. ನಾಡಿನ ಕಲಾವಿದರು ಮತ್ತು ಕಲೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರಿಗೆ ನೀಡಲಾಗುವ ಮಾಸಾಶನದ ಮೊತ್ತವನ್ನು 3 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅನುದಾನ ನೀಡಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆಗಳನ್ನು ನಡೆಸುವ ಸಲುವಾಗಿ 1 ಕೋಟಿ ರೂ. ವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಬೇಕಾದ ಅಗತ್ಯದ ಅನುದಾನ ನೀಡಲಾಗುತ್ತಿದೆ ಎಂದರು.
ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ತುಂಬಿರುವ ಈ ಸಂಭ್ರಮದಲ್ಲಿ ನಾನು ಇಲಾಖೆಯ ಸಚಿವನಾಗಿರುವುದು ನನ್ನ ಭಾಗ್ಯ. ಸುವರ್ಣ ಸಂಭ್ರಮದ ರಥ ಇಡೀ ರಾಜ್ಯದ ಮೂಲೆ ಮೂಲೆಗಳನ್ನು ಸಂಚರಿಸುತ್ತಿದೆ. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನವೆಂಬರ್ 1ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ 50 ಪುರುಷ ಹಾಗೂ ಮಹಿಳಾ ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

