ಕೊಪ್ಪಳ: ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಕನ್ನಡಿಗರೆಲ್ಲರೂ ಕನ್ನಡವನ್ನು ಆದ್ಯತೆ ಭಾಷೆಯಾಗಿ ಬಳಸಿದರೆ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಉಳಿಸಿ ಹಾಗೂ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಜ್ಯ ಸರ್ಕಾರ ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲು ಸೂಚಿಸಲಾಗಿದೆ ಎಂದರು.
ಕೊಪ್ಪಳ ಜಿಲ್ಲೆಗೆ ಲಭಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಸಚಿವರು 2024-25ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೊ ವಲಯದಲ್ಲಿ ₹238.81 ಕೋಟಿ, ಮ್ಯಾಕ್ರೊ ವಲಯದಲ್ಲಿ ₹128.59 ಕೋಟಿ ಅನುದಾನ ನಿಗದಿ ಪಡಿಸಲಾಗಿದೆ, ಕ್ರಿಯಾಯೋಜನೆ ಅನುಮೋದನೆ ಪ್ರಕ್ರಿಯೆ ಹಂತದಲ್ಲಿದೆ ಎಂದು ತಿಳಿಸಿದರು.
ಇದಕ್ಕೂ ಮೊದಲು ಪೊಲೀಸ್, ಎನ್ ಸಿಸಿ, ಸ್ಕೌಟ್ ಅಂಡ್ ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿದ ಪಥ ಸಂಚಲನ ಗಮನ ಸೆಳೆಯಿತು.
ಸಂಸದ ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಡಿಎಫ್ಒ ಕಾವ್ಯಾ ಚತುರ್ವೇದಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

