ಸಂಡೂರು: ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು.
ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಇಂದು ಪ್ರಚಾರ ಕೈಗೊಂಡರು.
ಓ ಮೇಘ ಬಿಲಿವರ್ಸ್ ಚರ್ಚ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್ಗೆ ಮತ ನೀಡಿ, ಅನ್ನಪೂರ್ಣ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಕರ್ನಾಟಕ ಇಂದು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಕೊಡುತ್ತಿದೆ. ಆದರೆ ನಮಗೆ ಕೇಂದ್ರದಿಂದ ಸಿಗುತ್ತಿರುವುದು ಅಲ್ಪ ಪಾಲು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಇಂಥ ಅನ್ಯಾಯ ಮಾಡಬಾರದು. ಎಲ್ಲರನ್ನೂ ಜೊತೆ ಸೇರಿಸಿಕೊಂಡು, ಮುನ್ನಡೆಯುತ್ತಿರುವ ಪಕ್ಷ ಕಾಂಗ್ರೆಸ್ ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿ ಎಂದು ಮನವಿ ಮಾಡಿದರು.
ಅಭ್ಯರ್ಥಿ ಅನ್ನಪೂರ್ಣ ಮಾತನಾಡಿ, ಸಂಡೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಮಹಿಳೆಗೆ ಅವಕಾಶ ನೀಡಿದೆ. ಈ ಹಿಂದೆ ಬೆಂಬಲ ನೀಡಿದಂತೆ ಈ ಬಾರಿಯೂ ಅವಕಾಶ ನೀಡಿ ಎಂದು ಮನವಿ ಮಾಡಿದರು.
ಎಐಸಿಸಿ ಮುಖಂಡರಾದ ಗೋಪಿನಾಥ್, ಕೆಪಿಸಿಸಿ ವಕ್ತಾರ ವೆಂಕಟೇಶ ಹೆಗಡೆ, ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

