ಮೈಸೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳಿಗ್ಗೆ 10.10ಕ್ಕೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸಾಥ್ ನೀಡಿದರು.
ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸಿದೆ.
ಮುಡಾದಿಂದ 50:50 ಅನುಪಾತದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು 14 ಬದಲಿ ನಿವೇಶನ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಮರಕ್ಕೆ ನಾಂದಿ ಹಾಡಿತ್ತು ಇದಾದ ಬಳಿಕ ಕಾನೂನು ಸಮರವು ನಡೆದಿತ್ತು.
ಇದಾದ ಬಳಿಕ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಈ ಪ್ರಕರಣದಲ್ಲಿ ಮೊದಲ ಆರೋಪಿ ಆಗಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಪತ್ನಿಗೆ ನಿವೇಶನ ಕೊಡಿಸಿದ ಆರೋಪ ಅವರ ಮೇಲಿದೆ. ಪ್ರಕರಣದ ಇತರ ಆರೋಪಿಗಳಾದ ಬಿ.ಎಂ. ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರ ವಿಚಾರಣೆಯು ಈಗಾಗಲೇ ಪೂರ್ಣಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

