Breaking News

ಸಂಡೂರು ವಿಧಾನಸಭಾ ಉಪಚುನಾವಣೆ: ಮತ ಎಣಿಕೆ ದಿನದಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.23 ರಂದು ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನ.22 ರ ಸಂಜೆ 06 ಗಂಟೆಯಿಂದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಮತ ಎಣಿಕೆ ಅಂಗವಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಜಾರಿಗೊಳಿಸಲಾಗಿದೆ.
ಇಂಕ್(ಮಸಿ), ನೀರು, ಬೆಂಕಿ ಪೋಟ್ಟಣ, ಲೈಟರ್ ಮತ್ತು ಇತರೆ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪಧಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಕಾರು, ಮೋಟಾರು ಬೈಕ್ ಮತ್ತು ಇತರೆ ವಾಹನಗಳಲ್ಲಿ ರ್ಯಾಲಿ ಆಯೋಜಿಸುವುದು. ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನ ಕೂಟಗಳನ್ನು ಏರ್ಪಡಿಸುವುದು ನಿಷೇಧಿಸಲಾಗಿದೆ.
5 ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿಯ ಪ್ರದರ್ಶನ ಮಾಡುವುದು ನಿಷೇಧಿಸಲಾಗಿದೆ. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *