ಬೆಳಗಾವಿ: ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟ, ಉಪಾಹಾರ ವ್ಯವಸ್ಥೆ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜರುಗಿದ ಅಧಿವೇಶನದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದೆ. ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.
ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಸಚಿವರು, ಹಿರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಾಹನ ಚಾಲಕರಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾವಹಿಸಬೇಕು. ಗಣ್ಯರುಗಳಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ವಸತಿಗಾಗಿ ಗುರುತಿಸಲಾದ ಹೊಟೇಲ್ಗಳನ್ನು ಪರಿಶೀಲಿಸಿ, ಅವುಗಳ ಮಾಲೀಕರೊಂದಿಗೆ ಚರ್ಚಿಸಿ ಕೊಠಡಿಗಳನ್ನು ಕಾಯ್ದಿರಿಸಬೇಕು ಎಂದು ತಿಳಿಸಿದರು.
ಸುವರ್ಣ ಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗದಂತೆ ಅಗತ್ಯ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದೂ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಪಾಲಿಕೆ ಆಯುಕ್ತೆ ಶುಭಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಕಾಡಾ ಆಡಳಿತಾಧಿಕಾರಿ ಸತೀಶಕುಮಾರ್, ಲೊಕೋಪಯೋಗಿ ಇಲಾಖೆ ಎಂಜಿನಿಯರ್ ಸೊಬರದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಡಿಡಿಪಿಐ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





