ಬೆಳಗಾವಿ: ಜೈನ ಧರ್ಮದ ಅಹಿಂಸಾ ತತ್ವ ಸಮಾಜಕ್ಕೆ ಮಾದರಿಯಾಗಿದೆ. ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅವುಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ತಾಲ್ಲೂಕಿನ ಬಸ್ತವಾಡದಲ್ಲಿ ಕರ್ನಾಟಕ ಸಮಸ್ತ ಜೈನ ಅಲ್ಪ ಸಂಖ್ಯಾತರ ಹೋರಾಟ ಸಮಿತಿ ಸೋಮವಾರ ಆಯೋಜಿಸಿದ್ದ ಜೈನ ಸಮಾವೇಶದಲ್ಲಿ ಜೈನ ಸಮುದಾಯದವರ ಬೇಡಿಕೆಗಳನ್ನು ಆಲಿಸಿ ಅವರು ಮಾತನಾಡಿದರು.
ಜೈನ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕೊಟ್ಟಿದ್ದು ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ. ನಿಮ್ಮ ಯಾವುದೇ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಿದೆ. ನಮ್ಮ ಮೇಲೆ ಭರವಸೆ ಇಡಿ ಎಂದು ಕೋರಿದರು.
ಜೈನ ಶಿಕ್ಷಣ ಸಂಸ್ಥೆಗಳಲ್ಲಿ ಮೊಟ್ಟೆ ವಿತರಣೆ ಕೈಬಿಡುವ ವಿಚಾರವಾಗಿ, ಜೈನ ಸಂಪ್ರದಾಯವನ್ನು ನಾವು ಗೌರವಿಸುತ್ತೇವೆ. ನಿಮಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವಂಥ ಯಾವ ನಿರ್ಧಾರವನ್ನೂ ಕೈಗೊಳ್ಳುವುದಿಲ್ಲ’ ಎಂದು ಭರವಸೆ ನೀಡಿದರು.
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ರಾಜ್ಯ ಸರ್ಕಾರ ನಿಮ್ಮ ಪರವಾಗಿಯೇ ಇದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಜೈನ ಶಿಕ್ಷಣ ಸಂಸ್ಥೆಗಳಲ್ಲಿ ಮೊಟ್ಟೆ ವಿತರಣೆಯನ್ನು ಸರ್ಕಾರ ಕಡ್ಡಾಯಗೊಳಿಸಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುತ್ತೇವೆ. ಹಾಗಾಗಿ ಸಮುದಾಯದವರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





