ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೀದರ್ ಜಿಲ್ಲೆಯ ಕಮಲನಗರದಿಂದ ನೌಬಾದ್ವರೆಗೆ ₹ 396.96 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿ ಕಳಪೆಯಾಗಿರುವುದು ಕಂಡುಬಂದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ವಿಧಾನಸಭೆಗೆ ಸೋಮವಾರ ತಿಳಿಸಿದರು.
ಬಿಜೆಪಿಯ ಪ್ರಭು ಚವ್ಹಾಣ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಅನುದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೇಲುಸ್ತುವಾರಿಯಲ್ಲಿ ಕೈಗೊಳ್ಳಲಾಗಿತ್ತು. 2022ರ ಜುಲೈ 15ರಂದು ಕಾಮಗಾರಿ ಪೂರ್ಣಗೊಳಿಸಿರುವುದಾಗಿ ಗುತ್ತಿಗೆದಾರರಿಗೆ ಪ್ರಮಾಣಪತ್ರವನ್ನೂ ವಿತರಿಸಲಾಗಿರುತ್ತದೆ’ ಎಂದರು.
ಕಾಂಕ್ರೀಟ್ನಿಂದ ಹೆದ್ದಾರಿ ನಿರ್ಮಿಸಲಾಗಿದೆ. ಹಲವೆಡೆ ಬಿರುಕು ಕಾಣಿಸಿಕೊಂಡಿದೆ. ಮುಂಬೈ ಐಐಟಿಯ ತಜ್ಞರಿಂದ ಸ್ಥಳ ಪರಿಶೀಲನೆ ಮಾಡಿಸಿ, ವರದಿ ಪಡೆಯಲಾಗಿದೆ. ತಜ್ಞರ ವರದಿಯನ್ನು ಆಧರಿಸಿ ಗುತ್ತಿಗೆದಾರರಿಂದಲೇ ಪರಿಹಾರ ಕಾಮಗಾರಿ ಮಾಡಿಸಲಾಗುತ್ತಿದೆ. ರಸ್ತೆಯ ನಿರ್ವಹಣೆಯ ಅವಧಿ 2026ರ ಜುಲೈವರೆಗೂ ಇದೆ. 2025ರ ಜನವರಿಯಲ್ಲಿ ಪರಿಹಾರ ಕಾಮಗಾರಿ ಆರಂಭಿಸಲಾಗುತ್ತದೆ’ ಎಂದು ತಿಳಿಸಿದರು.
ಕಳಪೆ ಕಾಮಗಾರಿಯಿಂದಾಗಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಹೆದ್ದಾರಿ ಅಪಘಾತಗಳ ತಾಣವಾಗಿ ಬದಲಾಗಿದೆ. ಅಧಿಕಾರಿಗಳು, ಗುತ್ತಿಗೆದಾರರು ಶಾಮೀಲಾಗಿ ಕಳಪೆ ಕಾಮಗಾರಿ ಮಾಡಿದ್ದಾರೆ. ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ 300ಕ್ಕೂ ಹೆಚ್ಚ ಅಪಘಾತಗಳು ಸಂಭವಿಸಿದ್ದು, 120ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸಚಿವರು ಖುದ್ದಾಗಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಬೇಕು. ಕಳಪೆ ಕಾಮಗಾರಿಗಳಿಗೆ ಕಾರಣವಾಗಿರುವ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಪ್ರಭು ಚವ್ಹಾಣ್ ಆಗ್ರಹಿಸಿದರು.
ಖುದ್ದಾಗಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸುವೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವೆ’ ಎಂದು ಸಚಿವರು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





