ದಾವಣಗೆರೆ: ಇಲ್ಲಿನ ಎಸ್.ಎಸ್.ಹೈಟೆಕ್ ಆಸ್ಪತ್ರೆಯ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿದ ಸೇತುವೆ ಅವೈಜ್ಞಾನಿಕವಾಗಿದ್ದು, ಕೂಡಲೇ ಸರಿಪಡಿಸಬೇಕು. ಇಲ್ಲವೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನಲ್ಲಿ ಪಾಲ್ಗೊಂಡಿರುವ ಅವರು ಈ ಕುರಿತು ಬುಧವಾರ ಸಚಿವರ ಗಮನ ಸೆಳೆದರು. ಪೊಲೀಸ್ ಮತ್ತು ಲೋಕೋಪಯೋಗಿ ಇಲಾಖೆ ಒದಗಿಸಿದ ಅಂಕಿ-ಅಂಶಗಳನ್ನು ಒಳಗೊಂಡಿರುವ ಮನವಿಯನ್ನು ಸಚಿವರಿಗೆ ನೀಡಿದರು.
ಜಯನಗರದಿಂದ ರಾಮನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ರಾಷ್ಟ್ರೀಯ ಹೆದ್ದಾರಿ ಬಳಿ ಮೇಲ್ಸೇತುವೆ ನಿರ್ಮಿಸಲಾಗಿದೆ. ಈ ಸೇತುವೆ ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಡಿಪೊಗೆ ಬಸ್ಗಳು ಇದೇ ಮಾರ್ಗದಲ್ಲಿ ಸಂಚರಿಸಲಿವೆ. ಭಾರಿ ವಾಹನ, ಆಂಬುಲೆನ್ಸ್ ಸಂಚಾರಕ್ಕೂ ತೊಡಕು ಉಂಟಾಗಿದೆ ಎಂದು ವಿವರಿಸಿದರು.
ಸೇತುವೆ ಕಿರಿದಾಗಿರುವ ಪರಿಣಾಮ ಸಂಚಾರ ಸಮಸ್ಯೆ ಸೃಷ್ಟಿಯಾಗುತ್ತಿದೆ. ಲಾರಿ ಸಂಚರಿಸುವ ವೇಳೆ ಇತರ ವಾಹನಗಳಿಗೆ ಅವಕಾಶ ಇಲ್ಲದಂತಾಗುತ್ತದೆ. ಈ ಮಾರ್ಗದಲ್ಲಿ ಸಂಚರಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸೂಕ್ತ ಎಂದು ಮನವಿಯಲ್ಲಿ ಕೋರಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

