ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ.ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು ಎಂದರು.
ಗ್ರಾಮ ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿರುತ್ತದೆ ಎಂದು ಹೇಳಿದರು.
ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರಿಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರಿಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

