ಬೆಳಗಾವಿ: ಅಲೆಮಾರಿ ಸಮುದಾಯದ ಮೀಸಲಾತಿ ಮತ್ತು ಇತರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ ಅವರು ಹೇಳಿದರು.
ಶೋಷಿತ ಸಮುದಾಯಗಳ ಸರ್ವಾಂಗೀಣ ಪ್ರಗತಿಗಾಗಿ ಸಂವಿಧಾನ ಕಲ್ಪಿಸಿದ ಒಳಮೀಸಲಾತಿಯಲ್ಲಿ ಶೇ.3ರಷ್ಟನ್ನು ಅಲೆಮಾರಿ ಸಮುದಾಯಗಳಿಗೆ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿ, ಪರಿಶಿಷ್ಟ ಜಾತಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳ ಪರವಾಗಿ ಮನವಿ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು
ನಾನೂ ಒಳಮೀಸಲಾತಿಗಾಗಿ ಹೋರಾಟ ಮಾಡಿ ಬಂದವನು. ನಿಮ್ಮ ನೋವು ನನಗೆ ತಿಳಿದಿದೆ ಬಲಿಷ್ಠರ ಎದುರು ಹೋರಾಡಲು ಸಾಧ್ಯವಾಗದಿದ್ದಾಗ ಇಡೀ ಸಮಾಜವೇ ನೋವು ಅನುಭವಿಸಬೇಕಾಗುತ್ತದೆ. ನಿಮ್ಮ ಬೇಡಿಕೆ ಈಡೇರಿಕೆಗೆ ಸಾಧ್ಯವಾದ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಲೆಮಾರಿ ಜನಾಂಗಕ್ಕೆ ಶಿಕ್ಷಣಕ್ಕೆ ಒಂದು ವ್ಯವಸ್ಥೆ ಆಗಬೇಕಿದೆ. ನೀವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವುದು ಮಾದರಿಯಾಗಿದೆ. ಈಗ ಹೋರಾಟದಿಂದಲೇ ಎಲ್ಲವನ್ನೂ ಪಡೆದುಕೊಳ್ಳಬೇಕಾಗಿದೆ
ನಿಮ್ಮ ಹಕ್ಕು ಕೇಳಲು ಬಂದಿರುವುದು ಒಳ್ಳೆಯದು. ನಮ್ಮ ಸರ್ಕಾರ ನಿಮ್ಮ ಬೇಡಿಕೆಯನ್ನು ಸಮಗ್ರವಾಗಿ ಪರಿಶೀಲಿಸಲಿದೆ ಎಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

