ಬೆಂಗಳೂರು: ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳ ಕೊರತೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಒಟ್ಟು 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರ ಪೈಕಿ, 48,922 ಹುದ್ದೆಗಳು ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ಮತ್ತು 10,850 ಹುದ್ದೆಗಳು ಪ್ರೌಢಶಾಲಾ ಹಂತದಲ್ಲಿ ಖಾಲಿ ಇವೆ.
ಈ ಸಮಸ್ಯೆ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದ್ದು, ವಿದ್ಯಾರ್ಥಿಗಳ ಪಾಠಕ್ರಮ, ಕಲಿಕೆ ಗುಣಮಟ್ಟ ಮತ್ತು ಬೋಧನಾ ಪ್ರಕ್ರಿಯೆಯ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ.
ವಿಧಾನಸಭೆಯಲ್ಲಿ ಈ ವಿಷಯವನ್ನು ಉಲೇಳಿಸಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಶಿಕ್ಷಕರ ಕೊರತೆಯನ್ನು ಸರಿಪಡಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಎಂದು ಘೋಷಿಸಿದ್ದಾರೆ. ಖಾಲಿ ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಬೋಧನಾ ಗುಣಮಟ್ಟವನ್ನು ಸುಧಾರಿಸಲು, ಮುಕ್ತ ಪದವಿ, ಡಿಪ್ಲೋಮಾ ಮತ್ತು ಬಿಇಡಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಹುದ್ದೆ ನೀಡುವ ಯೋಜನೆಗಳು ರೂಪಿಸಲಾಗಿದೆ. ಆದರೆ, ಈ ಪ್ರಕ್ರಿಯೆ ಸಮಯೋಚಿತವಾಗಿ ಪೂರ್ಣಗೊಳ್ಳದಿದ್ದರೆ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇದೆ.
ಈ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ನಿರಂತರ ಬೋಧನೆ ಇಲ್ಲದಿರುವುದು ಪಾಠಕ್ರಮದ ಮುಕ್ತಾಯವನ್ನು ವಿಳಂಬಗೊಳಿಸುವುದರೊಂದಿಗೆ, ವಿದ್ಯಾರ್ಥಿಗಳ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ, ಇಂತಹ ಸಮಸ್ಯೆ ಶಾಲಾ ಬಿಸಿಯೂಟ, ಶಿಶು ಅಭಿವೃದ್ಧಿ ಕಾರ್ಯಕ್ರಮ ಮತ್ತು ಬೋಧನಾ ಕಾರ್ಯಾಗಾರಗಳಂತಹ ಸರ್ಕಾರದ ಯೋಜನೆಗಳ ಯಶಸ್ವೀ ಜಾರಿಯಲ್ಲೂ ಅಡಚಣೆಯನ್ನು ಉಂಟುಮಾಡುತ್ತದೆ.
ಈ ಸಮಸ್ಯೆಯನ್ನು ತಡೆಗಟ್ಟಲು ಸರ್ಕಾರವು ಶಿಕ್ಷಕರ ನೇಮಕಾತಿಯನ್ನು ಶೀಘ್ರವೇ ಪ್ರಾರಂಭಿಸಬೇಕಾಗಿದೆ. ಈ ಪ್ರಕ್ರಿಯೆ ಸಂವೇದನಶೀಲವಾಗಿದ್ದು, ಅನುಭವ ಮತ್ತು ಅರ್ಹತೆ ಹೊಂದಿದ ಅಭ್ಯರ್ಥಿಗಳನ್ನು ಸೂಕ್ತ ಹುದ್ದೆಗಳಿಗೆ ಆಯ್ಕೆ ಮಾಡುವುದು ಅಗತ್ಯ. ಜೊತೆಗೆ, ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಹುದ್ದೆಗಳಿರುವುದರಿಂದ, ಶಿಕ್ಷಕರಿಗೆ ಗ್ರಾಮೀಣ ಶಾಲೆಗಳಲ್ಲಿ ಸೇವೆ ನೀಡಲು ಪ್ರೋತ್ಸಾಹ ನೀಡಲು ಸೂಕ್ತ ನೀತಿಗಳನ್ನು ರೂಪಿಸಬೇಕು.
ಇದು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಗುಣಮಟ್ಟವನ್ನು ಉತ್ತಮಗೊಳಿಸಲು ಮತ್ತು ರಾಜ್ಯದ ಶಿಕ್ಷಣದ ಸಮಗ್ರ ಅಭಿವೃದ್ದಿಗೆ ಅತ್ಯಗತ್ಯವಾಗಿದೆ. ಜೊತೆಗೆ, ಶಿಕ್ಷಣ ಇಲಾಖೆಯ ಜವಾಬ್ದಾರಿಯು ಶಿಕ್ಷಕರ ನೇಮಕಾತಿಯನ್ನು ತಾತ್ಕಾಲಿಕ ಪರಿಹಾರವಾಗಿ ಮಾತ್ರವಲ್ಲ, ಶಾಶ್ವತ ಪರಿಹಾರವಾಗಿ ಪರಿಗಣಿಸಬೇಕಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





