ಹುಬ್ಬಳ್ಳಿ: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿಗೆ ಪಾತ್ರ ಆಗಿರುವ ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ಅವರು ಬಿಗ್ ಅಪ್ಡೇಟ್ಸ್ ಕೊಟ್ಟಿದ್ದಾರೆ. ಈ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಅವ್ಯಸ್ಥೆಯಿಂದ ಈ ಭಾಗದ ಜನ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಇಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಿಂದ ನೂರಾರು ಜನ ಸಾವನ್ನಪ್ಪಿದ್ದಾರೆ.
ಅಲ್ಲದೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ರಸ್ತೆಯನ್ನು ಅಗಲೀಕರಣ ಮಾಡಬೇಕು ಎನ್ನುವ ಪ್ರಸ್ತಾವನೆ ಕಳೆದ ಮೂರು ವರ್ಷಗಳಿಂದ ಇದ್ದರೂ ಕಾರ್ಯರೂಪಕ್ಕೆ ಬರುವುದು ವಿಳಂಬವಾಗುತ್ತಿದೆ. ಇದೀಗ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಜೂನ್ ವೇಳೆಗೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದ್ದಾರೆ.
ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದತೆ ಕೇಂದ್ರ ಸರ್ಕಾರದಿಂದ ಅನುದಾನ ದೊರೆತಿದೆ. ಬೈಪಾಸ್ ಅಗಲೀಕರಣ ಹಾಗೂ ಉನ್ನತ್ತೀಕರಣ ಕಾಮಗಾರಿ ನಡೆಯುತ್ತಿದೆ. ಇನ್ನು ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯು 2025ರ ಜೂನ್ ವೇಳೆಗೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.
ಪ್ರಹ್ಲಾದ ಜೋಶಿ ಅವರು ಇಂದು ವಿಮಾನ ನಿಲ್ದಾಣ ರಸ್ತೆಯ ಇನ್ಫೋಸಿಸ್ ಮುಂಭಾಗದಲ್ಲಿರುವ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದರು. ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆಗಳನ್ನು ಕೂಡ ನಿರ್ಮಿಸಲಾಗುತ್ತಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ. ನೇಕಾರ ನಗರ, ತಾರಿಹಾಳ ಹಾಗೂ ಇತರೆಡೆ ಕೆಲವು ವರ್ಷಗಳಿಂದ ಹೆದ್ದಾರಿಯ ಪಕ್ಕದಲ್ಲಿ ಮನೆಗಳನ್ನು ನಿರ್ಮಿಸಿಕೊಂಡವರಿಗೆ ಬೇರೆಡೆ ತೆರಳುವಂತೆ ಸೂಚಿಸಲಾಗಿದೆ. ಅಲ್ಲದೇ ಅವರಿಗೆ ಆರ್ಥಿಕ ಪರಿಹಾರವನ್ನು ವಿತರಿಸಲಾಗುವುದು ಎಂದಿದ್ದಾರೆ.
ವಿಮಾನ ನಿಲ್ದಾಣ ರಸ್ತೆಯ ಇನ್ಫೋಸಿಸ್ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಹೆದ್ದಾರಿಯಿಂದ ಹುಬ್ಬಳ್ಳಿ ನಗರಕ್ಕೆ ಆಗಮಿಸುವವರಿಗೆ ಅತ್ಯಾಕರ್ಷಕ ಹುಬ್ಬಳ್ಳಿ ನಗರಕ್ಕೆ ಸ್ವಾಗತ ಎನ್ನುವ ಫಲಕವನ್ನು ಅಳವಡಿಸಲಾಗುತ್ತದೆ. ಅದರ ಜೊತೆಗೆ ವೃತ್ತವನ್ನು ನಿರ್ಮಿಸಿ, ಪೌಂಟೇನ್ ಮಾದರಿಯನ್ನು ಕಟ್ಟಲು ಕ್ರಮ ಕೈಗೊಳ್ಳುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೆದ್ದಾರಿ ನಿರ್ಮಾಣಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಹಕಾರ ಕೂಡ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಜೋಶಿ ಅವರು ತಿಳಿಸಿದ್ದಾರೆ.
ಅಪಾಯಕಾರಿ ಹೆದ್ದಾರಿ: ಇಲ್ಲಿನ ಹುಬ್ಬಳ್ಳಿ – ಧಾರವಾಡದ ನಡುವಿನ 32 ಕಿ.ಮೀ ಉದ್ದದ ಬೈಪಾಸ್ ರಸ್ತೆ ವಿಸ್ತೀರ್ಣ ಕಾಮಗಾರಿಯು ಕಳೆದ ಎರಡು ವರ್ಷಗಳಿಂದ ನಡೆಯುತ್ತಿದೆ. ಆದರೆ, ಈ ಮಾರ್ಗದಲ್ಲಿ ಕಾಮಗಾರಿಯನ್ನು ಶೀಘ್ರ ಮುಕ್ತಾಯ ಮಾಡಬೇಕು ಎಂದು ಸಾರ್ವಜನಿಕರು ಹಾಗೂ ವಾಹನ ಸವಾರರು ಆಗ್ರಹಿಸುತ್ತಲ್ಲೆ ಇದ್ದಾರೆ. ಇಲ್ಲಿನ ಕಿರಿದಾದ ದ್ವಿಪಥ ರಸ್ತೆಯಲ್ಲಿ ಅಪಘಾತ ಪ್ರಮಾಣ ಹೆಚ್ಚಳವಾಗುತ್ತಿದೆ. ಮುಂಜಾಗ್ರತಾ ಹಾಗೂ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ವಾಹನ ಸವಾರರಿಗೆ ಜಾಗೃತಿ ಮೂಡಿಸಲಾಗಿತ್ತು. ಇದರ ಹೊರತಾಗಿಯೂ ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಇಳಿಕೆಯಾಗಿಲ್ಲ. ಇದೀಗ ಕೊನೆಗೂ ಇದಕ್ಕೆ ಗಡುವು ನಿಗದಿ ಮಾಡಲಾಗಿದೆ. ಆದರೆ, ಈ ಗಡುವಿನ ಒಳಗಾದರೂ ಕಾಮಗಾರಿ ಮುಕ್ತಾಯವಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

