ಬೆಳಗಾವಿ: ಮಹಾತ್ಮ ಗಾಂಧಿ ಅಧ್ಯಕ್ಷತೆಯ ಐತಿಹಾಸಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಬೆಳಗಾವಿಯಲ್ಲಿ ʼಗಾಂಧಿ ಭಾರತʼ ಕಾರ್ಯಕ್ರಮಗಳು ಇಂದು ಆರಂಭವಾಗಿವೆ. ಡಿ.26 ಮತ್ತು 27ರಂದು ಎರಡು ದಿನಗಳ ಕಾರ್ಯಕ್ರಮದ ಮೊದಲ ದಿನದ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆ ಇಂದು ಮಧ್ಯಾಹ್ನ ಆರಂಭವಾಯಿತು.
ಬೆಳಗಾವಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಶುರವಾಗಿದ್ದು, ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಜೈರಾಮ್ ರಮೇಶ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಒಟ್ಟು 156 ಸದಸ್ಯರಿದ್ದಾರೆ.
ಇಂದಿನ ಸಭೆಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಪಕ್ಷದ ನೂತನ ಸಂಸದೆ ಪ್ರಿಯಾಂಕ್ ಗಾಂಧಿ ವಾಡ್ರಾ ಗೈರಾಗುವ ಸಾಧ್ಯತೆಯಿದೆ.
ಬೆಳಗಾವಿ ಟಿಳಕವಾಡಿಯ ವೀರಸೌಧಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ. ಜೊತೆಗೆ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಸಂಸದರು ಭಾಗವಹಿಸಿದ್ದಾರೆ.
ಶತಮಾನದ ಹಿಂದೆ; ಅಂದರೆ 1924ರ ಡಿಸೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆದಿತ್ತು. ಅದರಂತೆಯೆ ಇವತ್ತು 2024ರ ಡಿಸೆಂಬರ್ 26 ರಂದು ಸರಿಯಾಗಿ 3 ಗಂಟೆಗೆ ಸಿಡಬ್ಲ್ಯುಸಿ ಸಭೆ ಆರಂಭವಾಗಿದೆ.
ನಂತರ ಮರುದಿನ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇಂದು ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಶತಮಾನೋತ್ಸವ ಸಭೆಗೆ ಮುನ್ನಾದಿನ ಸಿಡಬ್ಲ್ಯುಸಿ ಸಭೆ ನಡೆಯುತ್ತಿದೆ. ಬೆಳಗಾವಿ ನಗರ ಐತಿಹಾಸಿಕ ಸಭೆಗೆ ಸಾಕ್ಷಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

