ವಿಜಯನಗರ: ನೀರಾವರಿ ಸಲಹಾ ಸಮಿತಿಯ ನಿರ್ಣಯದಂತೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಹರಿಸಲಾಗುತ್ತಿರುವ 3800 ಕ್ಯೂಸೆಕ್ ನೀರು ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ನೀರು ಸರಬರಾಜು ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಸೂಚನೆ ನೀಡಿದ್ದಾರೆ.
ಹೊಸಪೇಟೆಯ ಟಿ.ಬಿ.ಡ್ಯಾಂನ ಪ್ರವಾಸಿ ಮಂದಿರದಲ್ಲಿ ತುಂಗಭದ್ರಾ ಅಣೆಕಟ್ಟಿನ ಹಿರಿಯ ಅಧಿಕಾರಿಗಳೊಂದಿಗೆ ಅವರು ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜ.1 ರಿಂದ ಎಡದಂಡೆ ಕಾಲುವೆಯಲ್ಲಿ 3800 ಕ್ಯೂಸೆಕ್ಸ್ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಧರಿಸಲಾಗಿತ್ತು. ಅದರಂತೆ ಕಾಲುವೆಯಲ್ಲಿ ನೀರನ್ನು ಹರಿಯ ಬಿಡಲಾಗಿದ್ದು, ಎಲ್ಲಾ ಭಾಗದ ರೈತರಿಗೆ ನೀರು ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಇದರಿಂದ ಬೆಳೆ ಹಾನಿಯಾಗುವ ಆತಂಕದಿಂದ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಭಾಗಕ್ಕೂ ಸಮರ್ಪಕವಾಗಿ ನೀರು ದೊರೆಯಲು ಗೇಜ್ ನಿರ್ವಹಣೆ ಮಾಡುವುದು ಬಹಳ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು.
ದೂರವಾಣಿ ಮೂಲಕ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ ಅವರೊಂದಿಗೆ ಮಾತನಾಡಿದ ಸಚಿವರು, ಸಮರ್ಪಕ ನೀರು ನಿರ್ವಹಣೆಯ ನಿಟ್ಟಿನಲ್ಲಿ ಕಲಬುರ್ಗಿ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡುವಂತೆ ಸೂಚಿಸಿದರು. ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಜಿಲ್ಲೆಗಳ ಮಧ್ಯೆ ಸಮನ್ವಯತೆ ಸಾಧಿಸಬೇಕು. ನೀರು ಎಲ್ಲಾ ಭಾಗದ ರೈತರಿಗೂ ಸಮರ್ಪಕವಾಗಿ ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಮುಂದಿನ 10 ದಿನಗಳು ಬಹಳ ಪ್ರಮುಖವಾಗಿದ್ದು, 69 ಮೈಲು ಕಾಲುವೆಯ ಕೊನೆಯ ಭಾಗದ (ಟೈಲ್ಎಂಡ್) ರೈತರಿಗೂ ಸಮರ್ಪಕ ನೀರು ದೊರೆಯುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಸಂಸದ ರಾಜಶೇಖರ್ ಬಸವರಾಜ ಹಿಟ್ನಾಳ್, ತುಂಗಭದ್ರಾ ಅಣೆಕಟ್ಟಿನ ಮುಖ್ಯ ಅಭಿಯಂತರರು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

