ಬೆಂಗಳೂರು: ‘ಆಶಾ’ ಕಾರ್ಯಕರ್ತೆಯರು ಇದೇ 7ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವುದರಿಂದ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯು ತನ್ನ ಅಧಿಕಾರಿಗಳಿಗೆ ಸೂಚಿಸಿದೆ.
ಈ ಬಗ್ಗೆ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಕಾನೂನುಬಾಹಿರವಾಗಿ ಆಶಾ ಕಾರ್ಯಕರ್ತೆಯರು ಹೋರಾಟದಲ್ಲಿ ಭಾಗವಹಿಸದಂತೆ ಜಿಲ್ಲಾಡಳಿತ ಮನವೊಲಿಸಬೇಕು. 7 ರಿಂದ ಕರ್ತವ್ಯಕ್ಕೆ ಗೈರಾಗುವ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಪಡೆಯಬೇಕು. ಸೇವೆ ಒದಗಿಸಲು ತೊಡಕಾದ ಸ್ಥಳಗಳಲ್ಲಿ ಈಗಾಗಲೇ ಇಲಾಖೆಯಿಂದ ನೀಡಿರುವ ಮಾನದಂಡದಂತೆ ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ತಿಳಿಸಲಾಗಿದೆ.
ಸಮುದಾಯ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವ ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರ ಸಹಕಾರ ಪಡೆದು, ಆರೋಗ್ಯ ಸೇವೆಯಲ್ಲಿ ತೊಡಕಾಗದಂತೆ ಕ್ರಮವಹಿಸಬೇಕು. ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಗೆ ವೈದ್ಯಕೀಯ ತುರ್ತು ಹೊರತುಪಡಿಸಿ ಯಾವುದೇ ರಜೆ ನೀಡಬಾರದು ಎಂದು ಸೂಚಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

