Breaking News

ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಕಾಮಗಾರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಬಗ್ಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಂಬಂದಪಟ್ಟ ಎಲ್ಲ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಭೂಸ್ವಾಧೀನಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಯೋಜನೆಯಿಂದ 52,700 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಲ್ಲಿ 37,200 ಎಕರೆ ಜಮೀನು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲೇ ಇದೆ. ಈಗಾಗಲೇ ವಿತರಣಾ ಕಾಲುವೆ, ಉಪಕಾಲುವೆ, ಹೊಲಗಾಲುವೆ ಕಾಮಗಾರಿಗಳೆಲ್ಲ ಮುಗಿದು ನೀರು ಹರಿಯುತ್ತಿದೆ. ಇದರ ಪ್ರಯೋಜನ ರೈತರಿಗೂ ಆಗುತ್ತಿದೆ ಎಂದು ಹೇಳಿದರು.
ಈ ಯೋಜನೆಗೆ ಅಗತ್ಯ ಜಮೀನು ಬಿಟ್ಟುಕೊಡುವಂತೆ ರೈತರಿಗೆ ಮನವಿ ಮಾಡಿಕೊಂಡಿದ್ದೆ. ರೈತರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಅಂಥವರಿಗೆ ಈಗ ಪರಿಹಾರ ಹಣ ನೀಡಲು ಸಬೂಬು ಹೇಳುತ್ತಿರುವುದು ಸರಿಯಲ್ಲ. ಆದಷ್ಟು ಬೇಗ ಪ್ರಕ್ರಿಯೆ ಮುಗಿಯಬೇಕು ಎಂದು ಅವರು ಸೂಚಿಸಿದ್ದಾರೆ.
ಭೂಸ್ವಾಧೀನಾಧಿಕಾರಿ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇದೆ. ಇದನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಾಂತ್ರಿಕ ವಿಷಯಗಳ ನೆಪವೊಡ್ಡಿ ರೈತರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ರೇಗಿದರು.
ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್‌, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮೀನ್‌ಬಾವಿ, ನಿಗಮದ ಮುಖ್ಯ ಆಡಳಿತಾಧಿಕಾರಿ ಔದರಂ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಬಿ.ಎ.ನಾಗರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *