ಬೆಳಗಾವಿ: ಬೆಳಗಾವಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದ ‘ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಹೆಸರಿನ ಸಮಾವೇಶ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಅಚ್ಚರಿ ಎಂಬಂತೆ ಈ ಸಮಾವೇಶದಲ್ಲಿ ಬಿಜೆಪಿ ಶಾಸಕರೊಬ್ಬರು ಭಾಗವಹಿಸಿದ್ದಾರೆ.
ಬೆಂಗಳೂರು ನಗರದ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ‘ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ, ಈ ಮೂಲಕ ಪಕ್ಷದ ನಾಯಕರಲ್ಲಿ ಅಚ್ಚರಿಯನ್ನು ಉಂಟು ಮಾಡಿದ್ದಾರೆ.
ಎಸ್. ಟಿ. ಸೋಮಶೇಖರ್ ಪ್ರತಿಕ್ರಿಯೆ: ಬೆಳಗಾವಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಂಡ ಎಸ್. ಟಿ. ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, “ಇದು ಸರ್ಕಾರಿ ಕಾರ್ಯಕ್ರಮವಾಗಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಸರ್ಕಾರದ ಆಹ್ವಾನವಿತ್ತು ಮಹಾತ್ಮ ಗಾಂಧಿ ಅವರ ಅನುಯಾಯಿಯಾಗಿ, ಒಬ್ಬ ಶಾಸಕನಾಗಿ ನನ್ನ ಕರ್ತವ್ಯ ಇದಕ್ಕೆ ಗೌರವ ಕೊಡುವುದು. ಆದ್ದರಿಂದ ಬೆಂಗಳೂರಿನಿಂದ ಈ ಕಾರ್ಯಕ್ರಮಕ್ಕಾಗಿ ಬಂದಿದ್ದೇನೆ” ಎಂದರು.
ಯಾರಿಗೆ ಮಹಾತ್ಮ ಗಾಂಧಿ ಅವರ ಮೇಲೆ ಗೌರವವಿದೆ ಅವರು ಇಂತಹ ಕಾರ್ಯಕ್ರಮಗಳಿಗೆ ಬರಬೇಕು, ನಾನು ಬಂದಿದ್ದೇನೆ. ನಾನು ಮೂಲ ಕಾಂಗ್ರೆಸಿಗ, ಗಾಂಧಿ ಅನುಯಾಯಿ. ಸಂತೋಷದಿಂದ ಕಾರ್ಯಕ್ರಮಕ್ಕೆ ಬಂದಿದ್ದೇನೆ” ಎಂದು ಎಸ್. ಟಿ. ಸೋಮಶೇಖರ್ ಸ್ಪಷ್ಟಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





