ತುಮಕೂರು: 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣ ನೆರವೇರಿಸಿದ ಮಾನ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಸುದ್ದಿಗೋಷ್ಠಿಯನ್ನು ನಡೆಸಿದರು.
ಸಮಾಜದ ಅಂಕು-ಡೊಂಕುಗಳನ್ನು, ನ್ಯೂನತೆಗಳನ್ನು ಸರಿ ಮಾಡುವ ಮಾಧ್ಯಮದವರ ಪಾತ್ರ ಅಪಾರವಾದುದು. ತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗಿದೆ. ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳು.
ರಾಜ್ಯದಲ್ಲಿ ತುಮಕೂರು ಪ್ರತಿಷ್ಟಿತವಾದ ಜಿಲ್ಲೆಯಾಗಿದೆ. ಬೆಳಗಾವಿ, ಕಲಬುರಗಿ ನಂತರ ವಿಸ್ತೀರ್ಣದಲ್ಲಿ ತುಮಕೂರು ಇದೆ. 11 ವಿಧಾನಸಭಾ ಕ್ಷೇತ್ರಗಳು ಹಾಗೂ ಮೂರು ಲೋಕಸಭಾ ಕ್ಷೇತ್ರಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ಬೆಂಗಳೂರಿಗೆ 70 ಕಿ.ಮೀ ದೂರದಲ್ಲಿರುವ ತುಮಕೂರು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಗ್ರೇಟರ್ ಬೆಂಗಳೂರಿನಲ್ಲಿ ತುಮಕೂರು ಒಂದು ಭಾಗವಾಗಲಿದೆ. ಆ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.
ಬೃಹತ್ ಕೈಗಾರಿಕೆ ಮತ್ತು ಮೂಲಸೌಲಭ್ಯ (ಇನ್ಫ್ರಾಸ್ಟ್ರಕ್ಚರ್) ಸಚಿವರಿಗೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನ ಆಸುಪಾಸಿನಲ್ಲಿ ನಿರ್ಮಿಸುವಂತೆ ಮನವಿ ಮಾಡಿದ್ದೇನೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎರಡು ಕಡೆಗಳಲ್ಲಿ ಭೂಮಿ ಗುರುತಿಸಲಾಗಿದೆ. ವಸಂತ ನರಸಾಪುರ ಹೊಂದಿಕೊಂಡತೆ ರಾಷ್ಟ್ರೀಯ ಹೆದ್ದಾರಿ 48 ಸಮೀಪ 3 ಸಾವಿರ ಭೂಮಿ ಹಾಗೂ ಶಿರಾ ತಾಲ್ಲೂಕಿನ ಸಿ.ಬಿ.ದೇವಸ್ಥಾನ ಸಮೀಪ 4 ರಿಂದ 5 ಸಾವಿರ ಎಕರೆ ಭೂಮಿಯನ್ನು ನಕ್ಷೆ ಮೂಲಕ ಗುರುತಿಸಲಾಗಿದೆ. ಜಿಲ್ಲೆಯ ಶಾಸಕರು, ಸಂಸದರು ಪಕ್ಷಾತೀತವಾಗಿ ಒತ್ತಾಯಿಸುತ್ತೇವೆ ಎಂದು ಹೇಳಿದರು.
ಈಗಾಗಲೇ ಜಿಲ್ಲೆಯ ಹಾಗೂ ತುಮಕೂರು ಮಹಾನಗರದ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. 200 ಕೋಟಿ ರೂ. ವಿಶೇಷ ಅನುದಾನ ನೀಡಲಾಗಿದೆ. 30 ವಾರ್ಡ್ಗಳಲ್ಲಿ ರಸ್ತೆ, ಚರಂಡಿ ನಿರ್ಮಾಣ ಹಾಗೂ ನಗರದಲ್ಲಿ ಪಾಲಿಕೆ ವತಿಯಿಂದ ಮಾಂಸ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. ವದಾಗಾರ ಪ್ರಸ್ತಾವನೆ ಸಲ್ಲಿಸಲಾಗಿದೆ. ಜನರ ಆರೋಗ್ಯದ ಸುರಕ್ಷತೆಯಿಂದ ಮಾಂಸಮಾರಾಟ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ.
ಅಮಾನಿ ಕೆರೆಯಲ್ಲಿ ಗ್ಲಾಸ್ ಬ್ರಿಡ್ಜ್ (ಗಾಜಿನ ಸೇತುವೆ) ನಿರ್ಮಿಸಲು ನೀಲನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಅಡ್ವೆಂಚರ್ಗೆ ಅನುಕೂಲವಾಗಿದೆ. ಕೆಋಯ ಐಲ್ಯಾಂಡ್ನಲ್ಲಿ ಬರ್ಡ್ ಪಾರ್ಕ್ ನಿರ್ಮಿಸಲಾಗುವುದು. ಅಮಾನಿಕೆರೆಯನ್ನು ಸ್ವಚ್ಛಗೊಳಿಸಲಾಗುವುದು. ತುಮಕೂರು ನಗರದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣವನ್ನು ನಿರ್ಮಿಸಲಾಗುವುದು. ಗುಬ್ಬಿ ವೀರಣ್ಣ ಕಲಾ ಮಂದಿರವನ್ನು ಅಭಿವೃದ್ಧಿಪಡಿಸಲಾಗುವುದು. ಅಮಾನಿಕೆರೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ 25 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. 200 ಕೋಟೊ ರೂ. ಅನುದಾನದ ಪೈಕಿ 137 ಕೋಟಿ ರೂ. ಗಳಲ್ಲಿ 202 ರಸ್ತೆಗಳ ನಿರ್ಮಾಣ, ಸೇತುವೆ, ಚರಂಡಿಗಳ ನಿರ್ಮಾಣಕ್ಕೆ ಬಳಕೆಯಾಗಲಿದೆ ಎಂದು ಹೇಳಿದರು.
ಅಕ್ಕ ತಂಗಿ ಕೆರೆಯನ್ನು ಬೆಂಗಳೂರಿನ ಲಾಲ್ ಬಾಗ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. 200 ಕೋಟಿ ರೂ. ವಿಶೇಷ ಅನುದಾನದಲ್ಲಿ 18 ಪಾರ್ಕ್ಗಳ ಅಭಿವೃದ್ಧಿಗೆ ಹಣ ಹೊಂದಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ಅವೆಲ್ಲವನ್ನು ಹಂತಹಂತವಾಗಿ ನೇಮಕಾತಿ ಮಾಡಲಾಗುವುದು. ಮೂರು ತಿಂಗಳೊಳಗೆ 1500 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಮಾದರಿ ಹೆಲಿಕ್ಯಾಪ್ಟರ್ ಅನ್ನು ಟೌನ್ಹಾಲ್ ಪಕ್ಕದಲ್ಲಿ ಇರಿಸಲಾಗುವುದು. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಸರ್ಕಾರ ಒಪ್ಪಿಗೆ ಕೊಟ್ಟ ನಂತರ ಸ್ಥಾಪಿಸಲಾಗುವುದು. ಶ್ರೀ ಸಿದ್ಧಾರ್ಥ ಸಂಸ್ಥೆಯಿಂದ 36 ಲಕ್ಷ ವೆಚ್ಚದ ಪುತ್ಥಳಿಯನ್ನು ಕೊಡುಗೆಯಾಗಿ ನೀಡಲಾಗುವುದು. ಅಂಬೇಡ್ಕರ್ ಪುತ್ಥಳಿಯನ್ನು ಸರ್ಕಲ್ನಲ್ಲಿ ಸ್ಥಾಪಿಸುವುದಿಲ್ಲ. ಮಹಾನಗರ ಪಾಲಿಕೆಗೆ ಸೇರಿದ ಆವರಣದ ಜಾಗದಲ್ಲಿ ಸ್ಥಾಪಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

