ರಾಯಚೂರು: ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಪಂಗಡ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ವೈದ್ಯಕೀಯ ಮತ್ತು ರಾಯಚೂರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್ ಪಾಟೀಲ್ ಅವರು ಲೋಕಾರ್ಪಣೆ ಮಾಡಿದರು.
ನೂತನ ಕಟ್ಟಡ ವೀಕ್ಷಣೆ ಮಾಡಿದ ಸಚಿವರು ಮತ್ತು ಶಾಸಕರು ಮಾತನಾಡಿ, ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡಿ ಹಾಳಾಗದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಟೇಬಲ್, ಖುರ್ಚಿ, ಕಾಟ್ ಸೇರಿದಂತೆ ಇನ್ನೀತರ ಸಾಮಗ್ರಿಗಳನ್ನು ಗುಣಮಟ್ಟ ಪರೀಕ್ಷಿಸಿ ಅಳವಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ವಿಶ್ವ ವಿದ್ಯಾಲಯದ ಕುಲಪತಿಗಳು ಮತ್ತು ಕುಲಸಚಿವರಿಗೆ ತಿಳಿಸಿದರು.
ಬಳಿಕ ನಡೆದ ವೇದಿಕೆಯ ಕಾರ್ಯಕ್ರಮವನ್ನು ಸಸಿಗೆ ನೀರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಚಿವರು, 371ಜೇ ಜಾರಿಯಿಂದಾಗಿ ನಮ್ಮ ಭಾಗದ ಶೈಕ್ಷಣಿಕ ಬೆಳವಣಿಗೆಗೆ ಸಾಕಷ್ಟು ಅನುಕೂಲವಾಗಿದೆ. ಸೀಟು ಹಂಚಿಕೆ, ಉದ್ಯೋಗ ಎಲ್ಲದರಲ್ಲೂ 371ಜೆ ಗೆ ಪ್ರತ್ಯೇಕ ಮೀಸಲು ಲಭ್ಯವಾಗಿದ್ದು, ಇದನ್ನರಿತು ವಿದ್ಯಾರ್ಥಿಗಳು ಅಧ್ಯಯನ ಮಾಡಿ ಮೀಸಲು ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ಮಾಡಿದರು. ಈ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ಸಚಿವರು ಸಲಹೆ ಮಾಡಿದರು.
ರಾಯಚೂರ ವಿಶ್ವವಿದ್ಯಾಲಯಕ್ಕೆ ಬೇಕಾದ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಒತ್ತು ನೀಡಲಾಗುವುದು. ರಸ್ತೆ ಕಾಮಗಾರಿ, ಹೆಚ್ಚುವರಿ ತರಗತಿಗೆ ಕೋಣೆಗಳ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯಿಂದ ಅನುದಾನವನ್ನು ಕೊಡಲಾಗುವುದು ಎಂದು ತಿಳಿಸಿದರು.
ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಮಾತನಾಡಿ, ಹಿಂದುಳಿದ ಪ್ರದೇಶ ಹಣೆಪಟ್ಟಿ ಹೊಂದಿದ ರಾಯಚೂರ ಜಿಲ್ಲೆ ದಿನೇದಿನೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ವಿಶೇಷವಾಗಿ ರಾಯಚೂರ ಜಿಲ್ಲೆಯಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಒತ್ತು ಕೊಡಲಾಗಿದೆ.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸಹ ವಸತಿ ನಿಲಯಗಳನ್ನು ನಿರ್ಮಿಸಬೇಕಿದ್ದು ಇದಕ್ಕೆ ಬೇಕಾಗುವ ಅನುದಾನ ಬೇಡಿಕೆಯ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.
ವಿಶ್ವವಿದ್ಯಾಲಯದ ಕುಲಪತಿ ಡಾ.ಸುಯಮಿಂದ್ರ ಕುಲಕರ್ಣಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದಲ್ಲಿ ವಿಧಾನ ಪರಿಷತ್ ಶಾಸಕರಾದ ಎ ವಸಂತಕುಮಾರ, ಕುಲಸಚಿವರಾದ ಶಂಕರ ವಣಕ್ಯಾಳ, ಮೌಲ್ಯಮಾಪನ ಕುಲಸಚಿವರಾದ ಯರ್ರಿಸ್ವಾಮಿ, ಸಿಂಡಿಕೇಟ್ ಸದಸ್ಯರಾದ ಶರಣಬಸವ, ಮುಖಂಡರಾದ ಬಸನಗೌಡ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಸೇರಿದಂತೆ ಇನ್ನೀತರರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

