ಬೆಂಗಳೂರು : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸೇವಾಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಬುಧವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.
ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿ ಬಿಟ್ಟು ಮೊದಲು ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಬೇಕು. ಸರಕಾರಿ ಶಿಕ್ಷಕರಂತೆ ಬೇಸಿಗೆ ರಜೆಯನ್ನು ಸೇರಿ 12 ತಿಂಗಳು ವೇತನವನ್ನು ನೀಡುವುದರ ಜತೆಗೆ ಸೇವೆಯಲ್ಲಿ ಮುಂದುವರಿಸಿ, ನೇಮಕಾತಿಯಲ್ಲಿ ಪ್ರತಿ ವರ್ಷ ಶೇ.5ರಷ್ಟು ಕೃಪಾಂಕ ನೀಡಬೇಕು ಎಂದು ಧರಣಿನಿರತರು ಆಗ್ರಹಿಸಿದರು.
ಸುಪ್ರೀಂ ಕೋರ್ಟ್ ಆದೇಶದಂತೆ ವೇತನ ಹೆಚ್ಚಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಬೇಕು. ಸರಕಾರಿ ಶಿಕ್ಷಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಅತಿಥಿ ಶಿಕ್ಷಕರಿಗೂ ನೀಡಬೇಕು. ಪ್ರತಿವರ್ಷ ಸೇವಾ ಪ್ರಮಾಣ ಪತ್ರ ನೀಡಬೇಕು. ಅತಿಥಿ ಶಿಕ್ಷಕ ಪದವನ್ನು ತೆಗೆದುಹಾಕಿ, ಗೌರವ ಅಥವಾ ಅರೆಕಾಲಿಕ ಶಿಕ್ಷಕ ಎಂದು ಕರೆಯಬೇಕು ಎಂದು ಒತ್ತಾಯಿಸಿದರು.
ಖಾಯಂ ಶಿಕ್ಷಕರಿಗೆ ನೀಡುವ ಸ್ಥಾನಮಾನದ ಜತೆಗೆ ತರಬೇತಿಯನ್ನು ನೀಡಬೇಕು. ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಅತಿಥಿ ಶಿಕ್ಷಕರನ್ನು ಸೇರಿಸಿ, ಜೀವ ವಿಮೆಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಧರಣಿಯಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಹನುಮಂತ ಎಚ್.ಎಸ್., ಗೌರವಾಧ್ಯಕ್ಷ ಅನಂತನಾಯ್ಕ.ಎನ್, ಉಪಾಧ್ಯಕ್ಷೆ ಲೋಲಾಕ್ಷಿ, ಪ್ರದಾನ ಕಾರ್ಯದರ್ಶಿ ಬಸವರಾಜ ಕರಡಿಗುಡ್ಡ, ಖಜಾಂಚಿ ಸೌಮ್ಯ ಎಚ್.ಎಸ್ ಮತ್ತಿತರರು ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

