ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಬಸ್ ಕಂಡಕ್ಟರ್ ತನ್ವೀರ್ ಹೊರಕೆರೆ(38) ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆಶಿಕಾರಿಪುರದಿಂದ ಮುಡುಬ ಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿ ತನ್ವೀರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ಮಾಡಿದ ಇಬ್ಬರು ಪುರುಷರು, ಓರ್ವ ಮಹಿಳೆ ವಿರುದ್ಧ ದೂರು ದಾಖಲಿಸಲಾಗಿದೆ.ಶುಕ್ರವಾರ ಸಂಜೆ ಶಿಕಾರಿಪುರ ಬಸ್ ನಿಲ್ದಾಣದಲ್ಲಿ ಕೆಲವು ಶಾಲಾ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ಚಾಲಕ ಕುಳಿತುಕೊಳ್ಳುವ ಸೀಟಿನ ಬಾಗಿಲಿನಿಂದ ಬಸ್ ಹತ್ತಲು ಮುಂದಾಗಿದ್ದರು. ಡ್ರೈವರ್ ಸೀಟ್ ಬಾಗಿಲಿನಿಂದ ಹತ್ತದಂತೆ ಅವರಿಗೆ ತಿಳಿಸಿದ ಕಂಡಕ್ಟರ್ ತನ್ವೀರ್ ಕೆಳಗಿಳಿಸಿ ಹಿಂದಿನ ಬಾಗಿಲಿನಿಂದ ಹತ್ತಿಸಿಕೊಂಡು ಮುಡುಬ ಸಿದ್ದಾಪುರಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುವಾಗ ಕೋಟಿಪುರದಲ್ಲಿ ಕೆಲವರು ಬಸ್ ತಡೆದು ಕಂಡಕ್ಟರ್ ನನ್ನು ಕೆಳಗಿಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಜರುಗಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

