‘ವೈಟ್ ಕಾಲರ್’ ಭಯೋತ್ಪಾದಕ ಜಾಲದ ತನಿಖೆಯ ಭಾಗವಾಗಿ ಜಮ್ಮುಕಾಶ್ಮೀರ ಪೊಲೀಸರು ಮೂವರು ಸರ್ಕಾರಿ ನೌಕರರು ಸೇರಿ ಒಟ್ಟು 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅನಂತ್ನಾಗ್, ಪುಲ್ವಾಮಾ ಮತ್ತು ಕುಲ್ಲಾಂ ಜಿಲ್ಲೆಗಳಲ್ಲಿ ಶಂಕಿತ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಭವಿಸಿದ ಕಾರು ಸ್ಫೋಟದ ನಂತರ ವೈಟ್ ಕಾಲರ್ ಭಯೋತ್ಪಾದಕ ಜಾಲ ಸಕ್ರಿಯವಾಗಿರುವುದು ಬೆಳಕಿಗೆ ಬಂದಿತ್ತು. ಜಾಲದ ಬೆನ್ನು ಹತ್ತಿರುವ ವಿವಿಧ ಭದ್ರತಾ ಸಂಸ್ಥೆಗಳು ತನಿಖೆಯನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ ಪೊಲೀಸರು ಕೂಡ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿದ್ದು, ಅವರನ್ನು ವಿಚಾರಣೆಗೆ ಗುರಿಪಡಿಸಿದ್ದಾರೆ. ವಿಚಾರಣೆಯ ವೇಳೆ ಕೆಲವು ಶಂಕಿತರು ಟರ್ಕಿಗೆ ಭೇಟಿ ನೀಡಿದ್ದ ಸಂಗತಿ ಬಯಲಾಗಿದೆ. ಇದೇ ವೇಳೆ ಫರೀದಾಬಾದ್ನಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿ ಏಳು ಮಂದಿಯನ್ನು ಬಂಧಿಸಲಾಗಿದೆ. ಒಟ್ಟಾರೆ, ಈವರೆಗೆ ವೈಟ್ ಕಾಲರ್ ಭಯೋತ್ಪಾದಕ ಜಾಲ ಪ್ರಕರಣದಲ್ಲಿ 200ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

