ಬೈಕ್ ಸವಾರನ ಅಡ್ಡಗಟ್ಟಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ನ.15 ರಂದು ಮುಂಜಾನೆ ಶಾಂತಿನಗರದ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ದ್ವಿಚಕ್ರ ವಾಹನ ಸವಾರನೊಬ್ಬನನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ದರೋಡೆ ಯತ್ನಿಸಿದ್ದರು. ಅದಕ್ಕೆ ಬೈಕ್ ಸವಾರ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಆರೋಪಿಗಳ ವಿಚಾರಣೆಯಲ್ಲಿ ಅದಕ್ಕೂ ಮೊದಲು ಕಬ್ಬನ್ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ದರೋಡೆ ಮಾಡಿಕೊಂಡು ಬರುತ್ತಿದ್ದರು. ಇದೇ ವೇಳೆ ಶಾಂತಿನಗರದ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ದ್ವಿಚಕ್ರ ವಾಹನ ಸವಾರನನ್ನು ದರೋಡೆ ಮಾಡಲು ವಿಫಲ ಯತ್ನ ನಡೆಸಿದ್ದರು. ಆರೋಪಿಗಳ ಪೈಕಿ ಶರವಣ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪ್ರಕರಣವೊಂದು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

