ಧಾರವಾಡ ಜಿಲ್ಲೆಯ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾದ ಕುಟುಂಬದ ವಿರುದ್ಧ ಸಾಮೂಹಿಕ ಬಹಿಷ್ಕಾರ ಹೇರಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಗ್ರಾಮಕ್ಕೆ ಭೇಟಿ ನೀಡಿ, ಜನಪ್ರತಿನಿಧಿಗಳು, ವಿವಿಧ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ.
ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬದ ಸದಸ್ಯರನ್ನು ಶನಿವಾರ ಭೇಟಿ ಮಾಡಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆಘಾತಕ್ಕೊಳಗಾದ ಕುಟುಂಬದವರಿಗೆ ಆಪ್ತ ಸಮಾಲೋಚನೆ ನಡೆಸಲಾಗುತ್ತಿದ್ದು, ಅವರಿಗೆ ಧೈರ್ಯ ತುಂಬಲಾಗುತ್ತಿದೆ. ಇಡೀ ಕುಟುಂಬಕ್ಕೆ ಪುನರ್ವಸತಿ ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
ಸಮಾನತೆ ಮತ್ತು ಮನುಷ್ಯತ್ವದ ಬಗ್ಗೆ ಮಾತನಾಡುವ ಸಮಾಜದಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ವಿಷಾದಕರ ಎಂದು ಸಚಿವರು ಹೇಳಿದರು. ಆತಂಕದಲ್ಲಿರುವ ಕುಟುಂಬದ ಜೊತೆ ರಾಜ್ಯ ಸರ್ಕಾರ ನಿಂತಿದ್ದು, ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಹಾಗೂ ಪರಿಹಾರವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಉಪಸ್ಥಿತರಿದ್ದರು. ಇನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಮರ್ಯಾದೆಗೇಡು ಹತ್ಯೆಗಳಂತಹ ವಿಶೇಷ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸ ಕಾನೂನು ಜಾರಿ ಅಗತ್ಯವಿದೆಯೇ ಎಂಬ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

